ಸಮಯಕ್ಕೆ ಸರಿಯಾಗಿ ಬರಲಿಲ್ಲ ಡಿಸಿಎಂ ಡಿಕೆಶಿ – ಸಭೆಯಿಂದ ನಿರ್ಗಮಿಸಿದ ಬಿಜೆಪಿಯ 5 ಶಾಸಕರು..!

ಸಮಯಕ್ಕೆ ಸರಿಯಾಗಿ ಬರಲಿಲ್ಲ ಡಿಸಿಎಂ ಡಿಕೆಶಿ – ಸಭೆಯಿಂದ ನಿರ್ಗಮಿಸಿದ ಬಿಜೆಪಿಯ 5 ಶಾಸಕರು..!

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸರ್ವ ಪಕ್ಷ ಸಭೆ ಆಯೋಜಿಸಲಾಗಿತ್ತು. ಆದರೆ, ಮೊದಲ ಸಭೆಯಲ್ಲೇ ಬಿಜೆಪಿ ಶಾಸಕರು ಆಕ್ರೋಶಗೊಂಡು ಹೊರನಡೆದಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಬರಲಿಲ್ಲ ಅನ್ನೋ ಕಾರಣ ಮುಂದಿಟ್ಟುಕೊಂಡು ಬಿಜೆಪಿ ಕೆಲ ಶಾಸಕರು ಸಭೆಯಿಂದ ಹೊರ ನಡೆದಿದ್ದಾರೆ.

ಇದನ್ನೂ ಓದಿ: ʼದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!ʼ – ಬಿಜೆಪಿಗೆ ಟಾಂಗ್‌ ಕೊಟ್ಟ ಕಾಂಗ್ರೆಸ್‌

ಬೆಂಗಳೂರಿನಲ್ಲಿ ಮಳೆ ಅನಾಹುತವನ್ನು ತಪ್ಪಿಸುವುದು ಹೇಗೆ?, ಯಾವ ಯಾವ ಕ್ರಮ ಕೈಗೊಳ್ಳಬಹುದು ಎಂಬ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಬೆಳಗ್ಗೆ 11ಕ್ಕೆ ಸಭೆ ಕರೆದಿದ್ದರು. ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರೀತಿಯ ಸರ್ವ ಪಕ್ಷ ಸಭೆ ಆಯೋಜಿಸಲಾಗಿತ್ತು. ಸಭೆಗೆ ಬಿಜೆಪಿ ಶಾಸಕರಾದ ಸೋಮಶೇಖರ್, ಭೈರತಿ ಬಸವರಾಜ್, ಅಶ್ವತ್ಥ್ ನಾರಾಯಣ, ಎಸ್.ಆರ್.ವಿಶ್ವನಾಥ್ , ಮುನಿರತ್ನ ಆಗಮಿಸಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಸಭೆ ಆರಂಭ ಆಗಿಲ್ಲವೆಂದು ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಬಗ್ಗೆ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದು, ಬೆಂಗಳೂರಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ಸಲುವಾಗಿ ಸಭೆ ಕರೆಯಲಾಗಿತ್ತು. ನಿನ್ನೆ ಸಂಜೆ ವಾಟ್ಸಾಪ್ ಮೂಲಕ ಸಭೆಗೆ ಆಹ್ವಾನ ನೀಡಿದ್ದರು. ನಮಗೆ ಸಭೆಗೆ ಕರೆದು ಒಂದು ಗಂಟೆಯಿಂದ ಡಿ.ಕೆ ಶಿವಕುಮಾರ್ ಕಾಯಿಸಿದ್ದಾರೆ. ತಡವಾಗಿ ಆಗಮಿಸುವ ಬಗ್ಗೆ ಮಾಹಿತಿ ನೀಡಿರಲಿಲ್ಲ. ಹೀಗಾಗಿ ಸಭೆಯಿಂದ ನಿರ್ಗಮಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು  ವಿಧಾನಸೌಧದಿಂದ ಸಮ್ಮೇಳನ ಸಭಾಂಗಣದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸಭೆ ತಡವಾಗಿ ಆರಂಭವಾಗಿದೆ. ಸಭೆಯಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಿದ್ದಾರೆ. ಇನ್ನುಳಿದಂತೆ ನಗರದ ಬಿಜೆಪಿಯ ಐವರು ಶಾಸಕರು ಸಭೆ ವಿಳಂಬವಾಯಿತು ಎಂದು ಸಭೆಗೆ ಗೈರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಕೆಲ ಪ್ರದೇಶದಲ್ಲಿ ಅನಾಹುತ ಸಂಭವಿಸಿತ್ತು. ಅಂಡರ್ ಪಾಸ್ ಗಳಲ್ಲಿ ನೀರು ನಿಂತಿದ್ದ ಪರಿಣಾಮವಾಗಿ ಪ್ರಾಣ ಹಾನಿಯೂ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅನಾಹುತ ಸಂಭವಿಸುವುದನ್ನು ತಡೆಯುವ ನಿಟ್ಟಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿ ಎಲ್ಲಾ ಶಾಸಕರು ಮತ್ತು ಸಂಸದರ ಸಭೆ ಕರೆದಿದ್ದರು.

suddiyaana