ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್! – ಗೃಹಜ್ಯೋತಿ ಯೋಜನೆಗೆ ಸರ್ಕಾರದಿಂದ ಮಾರ್ಗಸೂಚಿ
![ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್! – ಗೃಹಜ್ಯೋತಿ ಯೋಜನೆಗೆ ಸರ್ಕಾರದಿಂದ ಮಾರ್ಗಸೂಚಿ](https://suddiyaana.com/wp-content/uploads/2023/06/೧೨.jpg)
ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಸಂಚಾರಕ್ಕೆ ಸಂಬಂಧಿಸಿದಂತೆ ಶಕ್ತಿ ಯೋಜನೆಯ ಮಾರ್ಗಸೂಚಿಯನ್ನ ಸರ್ಕಾರ ಬಿಡುಗಡೆ ಮಾಡಿದೆ.
ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಐಷಾರಾಮಿ ಬಸ್ಗಳಲ್ಲಿ ಫ್ರೀ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಬಸ್ಗಳಲ್ಲಿ ಶೇಕಡಾ 50ರಷ್ಟು ಆಸನಗಳನ್ನ ಪುರುಷರಿಗೆ ಮೀಸಲಿಡಬೇಕು.ಯೋಜನೆಗೆ ತಗುಲುವ ವೆಚ್ಚವನ್ನ ಸರ್ಕಾರವೇ ಭರಿಸಲಿದೆ. ಪಾಸ್ ಮಾದರಿಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. 3 ತಿಂಗಳಿಗೊಮ್ಮೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ಗುರಿ ಹೊಂದಲಾಗಿದ್ದು, ಜೂನ್ 11ರಿಂದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಸಂಚಾರ ಮಾಡಬಹುದು ಎಂದು ತಿಳಿಸಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಮಾಡಿಸಬೇಕಾ ? – ಕರ್ನಾಟಕ ರಾಜ್ಯ ಆಹಾರ ಇಲಾಖೆಯಿಂದ ಅರ್ಜಿಗೆ ಆಹ್ವಾನ
ಇನ್ನು 200 ಯುನಿಟ್ ವಿದ್ಯುತ್ ಅನ್ನು ಗೃಹ ಜ್ಯೋತಿ ಯೋಜನೆ ನೀಡಲಾವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಯೋಜನೆಯ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ, ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ. ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು. ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು ಹಾಗೂ ಗ್ರಾಹಕರು ನೆಟ್ ಬಿಲ್ ಪಾವತಿಸುವುದು.
ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ, ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ – ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
ಜೂನ್ 30ರ ಒಳಗಡೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು. ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯತ್ ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುತ್ತದೆ.