ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ – ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯೇ ಕಾಂಗ್ರೆಸ್‌ಗೆ ಕಗ್ಗೆಂಟು

ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ – ಲೋಕಸಭೆ ಚುನಾವಣೆಗೆ  ಅಭ್ಯರ್ಥಿಗಳ ಆಯ್ಕೆಯೇ ಕಾಂಗ್ರೆಸ್‌ಗೆ ಕಗ್ಗೆಂಟು

ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿದ್ದು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಕ್ಷೇತ್ರ ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಆದ್ರೆ ಕಾಂಗ್ರೆಸ್​ಗೆ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ಕಗ್ಗಂಟಾಗಿದೆ. ಪಕ್ಷದ ಹಿರಿಯರು, ಅನುಭವಿಗಳು ಮತ್ತು ಸಚಿವರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ. ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಳ್ತಿದ್ದಾರೆ. ಹೀಗಾಗಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡೋದು ಕೂಡ ಡಿಲೇ ಆಗ್ತಿದೆ.

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗೆ ಟಕ್ಕರ್‌ ಕೊಡಲು ಬಿಜೆಪಿಯ ಅಸ್ತ್ರ ಏನು? – ಲೋಕಸಮರ ಗೆಲ್ಲೋಕೆ ಕಮಲ ಪಡೆಯ ಪ್ಲಾನ್‌ ಏನು?

ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ನಾನು ಲೋಕಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ನಾನು ಹೈಕಮಾಂಡ್‌ ಒದೆಯುವ ಫುಟ್‌ಬಾಲ್‌ ಅಲ್ಲ ಎನ್ನುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಹಾಗೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. 10 ವರ್ಷಗಳ ಹಿಂದೆ ಸ್ಪರ್ಧೆಗೆ ಅವಕಾಶ ನೀಡಿದ್ದರೆ, ನಾನು ತಂಬಾ ಸಂತೋಷಪಡುತ್ತಿದ್ದೆ. ಆದರೆ, ಈಗ ನನಗೆ ಆ ಅವಕಾಶ ಬೇಡ. ನಾನು ಟಿಕೆಟ್‌ ಆಕಾಂಕ್ಷಿಯಲ್ಲ ಎಂದಿದ್ದಾರೆ. ಮೂಲಗಳ ಪ್ರಕಾರ, ಮಹದೇವಪ್ಪ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಷರತ್ತಿನ ಮೇಲೆ ಅವರನ್ನು ಸಚಿವರನ್ನಾಗಿ ಮಾಡಲಾಗಿತ್ತು. ಸಿದ್ದರಾಮಯ್ಯ ಸಮ್ಮುಖದಲ್ಲೇ ಷರತ್ತು ವಿಧಿಸಲಾಗಿತ್ತು. ಆದರೆ, ಈಗ ಅವರು ಸ್ಪರ್ಧೆಗೆ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನ ಗೆದ್ದರೆ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿ ತಲಾ ಒಂದು ಸ್ಥಾನ ಗಳಿಸಿದ್ದರು. ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 66 ಮತ್ತು ಜೆಡಿಎಸ್‌ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಹೀಗಾಗಿ ಪ್ರಭಾವಿ ನಾಯಕರನ್ನೇ ಲೋಕಸಭೆಗೆ ಇಳಿಸೋ ತಯಾರಿಯಲ್ಲಿದೆ. ಉತ್ತರ ಕರ್ನಾಟಕದಲ್ಲೂ ಹಾಲಿ ಸಚಿವರನ್ನೇ ಕಣಕ್ಕಿಳಿಸೋಕೆ ಹೈಕಮಾಂಡ್ ಪ್ಲ್ಯಾನ್ ಮಾಡ್ತಿದೆ. ಪ್ರಭಾವಿ ನಾಯಕರನ್ನೇ ಕಣಕ್ಕೆ ಇಳಿಸಿ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನ ಗೆಲ್ಲೋದು ಕಾಂಗ್ರೆಸ್ ನ ಉದ್ದೇಶವಾಗಿದೆ.

ಇನ್ನು ದಾವಣಗೆರೆ ಕ್ಷೇತ್ರಕ್ಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಹೆಸರನ್ನು ಹೈಕಮಾಂಡ್ ಪ್ರಸ್ತಾಪಿಸಿದೆ. ಆದರೆ, ಅವರು ತಮ್ಮ ಕುಟುಂಬದ ಸದಸ್ಯರೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದಾರೆ.  ಈಗ ಆ ಕ್ಷೇತ್ರಕ್ಕೆ ಹೊಸಬರನ್ನು ಕಣಕ್ಕಿಳಿಸಲು ಹೈಕಮಾಂಡ್ ಯೋಜಿಸಿದೆ. ಕುರುಬ ಸಮುದಾಯದ ಬಿ.ಜಿ ವಿನಯ್ ಕುಮಾರ್ ಅವರು ಟಿಕೆಟ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ರಾಯಚೂರಿನಲ್ಲಿ ಸೇವೆ ಸಲ್ಲಿಸಿದ್ದ ಐಎಎಸ್‌ ಅಧಿಕಾರಿ ಜಿ ಕುಮಾರ್‌ ನಾಯ್ಕ್‌ ಅವರನ್ನು ರಾಯಚೂರಿನಲ್ಲಿಯೇ ಕಣಕ್ಕಿಳಿಸುವ ಸಾಧ್ಯತೆಗಳಿವೆ. ಕೋಲಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಕೋಲಾರದಲ್ಲಿ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಆದರೆ, ಕೂಡ ಪಕ್ಷದೊಳಗೇ ವಿರೋಧಗಳಿದ್ದು, ಅವರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ, ಕೋಲಾರದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎಂ ನಾರಾಯಣಸ್ವಾಮಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇನ್ನು, ಸಚಿವರಾದ ಸತೀಶ್ ಜಾರಕಿಹೊಳಿ, ಬಿ ನಾಗೇಂದ್ರ ಮತ್ತು ಈಶ್ವರ ಖಂಡ್ರೆ ಅವರು ಕ್ರಮವಾಗಿ ಬೆಳಗಾವಿ, ಬಳ್ಳಾರಿ ಹಾಗೂ ಬೀದರ್ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಸತೀಶ್ ಜಾರಕಿಹೊಳಿ, ಮಹದೇವಪ್ಪ ಸೇರಿದಂತೆ ಕೆಲವು ಸಚಿವರು ರಾಷ್ಟ್ರ ರಾಜಕಾರಣಕ್ಕೆ ಬದಲಾಗಲು ಸಿದ್ಧರಿಲ್ಲ. ಅವರು ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್​ಗೆ ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿದೆ.

Sulekha