ಕುಪ್ವಾರಾದಲ್ಲಿ ಭಾರತೀಯ ಸೇನೆಯ ಮಿಂಚಿನ ಕಾರ್ಯಾಚರಣೆ- ಇಬ್ಬರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ಅವರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು.
ಆರಂಭದಲ್ಲಿ ಅಡಗು ತಾಣದಲ್ಲಿದ್ದ ಉಗ್ರರು ಆಕ್ರಮಣ ನಡೆಸಿದರು. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಭಯೋತ್ಪಾದಕರು ಬಲಿಯಾದರು. ಅದಾಗ್ಯೂ ಅವರ ಶವವನ್ನು ಇನ್ನು ವಶಕ್ಕೆ ಪಡೆದುಕೊಂಡಿಲ್ಲ. ಸ್ಥಳಕ್ಕೆ ಭಯೋತ್ಪಾದನೆ ನಿಗ್ರಹ ದಳ ಧಾವಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದಲ್ಲಿ ಸಾವಿನ ಸಂಖ್ಯೆ 41ಕ್ಕೆ ಏರಿಕೆ – ಮದ್ರಾಸ್ ಹೈಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ
ಚಳಿಗಾಲ ಆರಂಭವಾಗುವ ಮುನ್ನ ಒಳನುಸುಳುವಿಕೆ ಪ್ರಯತ್ನಗಳು ಸಾಮಾನ್ಯವಾಗಿ ಹೆಚ್ಚಾಗುತ್ತವೆ ಎಂದು ಹಿರಿಯ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. “ಹಿಮಪಾತಕ್ಕೂ ಮುನ್ನ ಯಾವಾಗಲೂ ಒಳನುಸುಳುವಿಕೆ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಭದ್ರತಾ ಪಡೆಗಳು ಗಡಿಯಲ್ಲಿ ಕಟ್ಟೆಚ್ಚರ ವಹಿಸಿವೆʼʼ ಎಂದು ವಿವರಿಸಿದ್ದಾರೆ. ಬಂಡಿಪೋರಾ ಮತ್ತು ಕುಪ್ವಾರಾ ಸೆಕ್ಟರ್ಗಳ ಎದುರಿನ ಎಲ್ಒಸಿಯಾದ್ಯಂತ ಲಾಂಚ್ ಪ್ಯಾಡ್ಗಳಲ್ಲಿ ಭಯೋತ್ಪಾದಕರು ಒಳನುಸುಳುವ ಅವಕಾಶಕ್ಕಾಗಿ ಕಾಯುತ್ತಲೇ ಇದ್ದಾರೆ ಎನ್ನಲಾಗಿದೆ. “ಭದ್ರತೆ ತುಂಬಾ ಬಿಗಿಯಾಗಿದೆ. ಯಾವಾಗಲೂ ಒಳನುಸುಳಲು ಪ್ರಯತ್ನ ನಡೆಯುತ್ತವೆ. ಆದರೆ ನಾವು ಈ ಸವಾಲನ್ನು ಎದುರಿಸಲು ಸಂಪೂರ್ಣ ಸಿದ್ಧರಾಗಿದ್ದೇವೆ ಮತ್ತು ಕಟ್ಟೆಚ್ಚರ ವಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.
ಹೈಟೆಕ್ ಕಣ್ಗಾವಲು ವ್ಯವಸ್ಥೆಗಳ ಸಹಾಯದಿಂದ ಸೇನೆ ಮತ್ತು ಬಿಎಸ್ಎಫ್ ಎಲ್ಒಸಿಯಲ್ಲಿ ಸರ್ಪಗಾವಲು ಹಾಕಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶಂಕಿತ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿದ್ದು, ಬಿಎಸ್ಎಫ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಬೆಳಗ್ಗೆ 6.30ರ ಸುಮಾರಿಗೆ ರಾಮಗಢ ವಲಯದ ಕರಾಲಿಯನ್ ಗ್ರಾಮದ ಮೇಲೆ ಡ್ರೋನ್ ಸುಳಿದಾಡುತ್ತಿರುವುದು ಕಂಡುಬಂದಿದ್ದು, ನಂತರ ಕಣ್ಮರೆಯಾಗಿದೆ ಎಂದು ವರದಿಯಾಗಿದೆ.

ನೋಡಿರಿ

