ಸಿದ್ದರಾಮಯ್ಯ ಮೊಮ್ಮಗ ರಾಜಕೀಯ ಎಂಟ್ರಿ ಫಿಕ್ಸ್! – ರಾಹುಲ್ ಗಾಂಧಿ ಜೊತೆಗಿನ ಫೋಟೊ ಹಂಚಿಕೊಂಡ ಧವನ್ ರಾಕೇಶ್

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗ್ತಿದೆ. ಒಂದ್ಕಡೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡಿತಾ ಇದೆ. ಮತ್ತೊಂದ್ಕಡೆ ಸಿಎಂ ಸಿದ್ಧರಾಮಯ್ಯ ಮೊಮ್ಮಗ ರಾಜಕೀಯ ಪ್ರವೇಶ ಫಿಕ್ಸ್ ಆಗಿದೆ. ಸಿಎಂ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು, ಇತ್ತೀಚೆಗೆ ತಾತನ ಜೊತೆ ವೇದಿಕೆಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಧವನ್ ರಾಕೇಶ್ ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ ಎಂದು ಹೇಳಿದ್ದಾರೆ.
ಇದನ್ನೂ ಓದಿ: 6 ತಿಂಗಳೊಳಗಿನ ಮಗುವಿಗೆ ಕೆಮ್ಮಿನ ಸಿರಪ್ ನೀಡುವಂತಿಲ್ಲ! – ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಸೋಶಿಯಲ್ ಮೀಡಿಯಾದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆಗಿನ ಫೋಟೊಗಳನ್ನು ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಪೋಸ್ಟ್ವೊಂದನ್ನ ಹಾಕಿ ರಾಜಕೀಯದ ಮೇಲಿರುವ ತನ್ನ ಒಲವನ್ನು ವ್ಯಕ್ತಪಡಿಸಿದ್ದಾರೆ.
ಧವನ್ ರಾಕೇಶ್ ಪೋಸ್ಟ್ನಲ್ಲಿ ಏನಿದೆ?
ಕಳೆದ ಆ.8 ರಂದು, ನಮ್ಮ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದಾವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ ಮತ್ತು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ.
ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿಗೆ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ. ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಪೋಸ್ಟ್ನಲ್ಲಿ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ಬರೆದುಕೊಂಡಿದ್ದಾರೆ.

ನೋಡಿರಿ

