ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ ಆಯೋಜನೆಗೆ ಗ್ರೀನ್‌ ಸಿಗ್ನಲ್?‌ –  ಮಾರ್ಗಸೂಚಿಯಲ್ಲಿ ಏನೇನಿದೆ?

ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ ಆಯೋಜನೆಗೆ ಗ್ರೀನ್‌ ಸಿಗ್ನಲ್?‌ –  ಮಾರ್ಗಸೂಚಿಯಲ್ಲಿ ಏನೇನಿದೆ?

ಐಪಿಎಲ್‌ ಸೀಸನ್‌ 19 ರ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಪಂದ್ಯ ಆಯೋಜನೆ ಇನ್ನು ಗ್ರೀನ್‌ ಸಿಗ್ನಲ್‌ ಸಿಕ್ಕಿಲ್ಲ. ಹೀಗಾಗಿ ಆರ್‌ಸಿಬಿ ಹೋಮ್‌ಗ್ರೌಂಡ್‌ ಆಯ್ಕೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಿನ್ನೆ ರಾತ್ರಿ ಕೆಎಸ್‌ಸಿಎ ನಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ಇದೀಗ ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ ಆಯೋಜನೆಗೆ ಗ್ರೀನ್‌ ಸಿಗ್ನಲ್‌ ಸಿಗುತ್ತಾ ಅನ್ನುವ ಕ್ಯೂರಿಯಾಸಿಟಿ ಮೂಡಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಂಕ್ರಾಂತಿ ಗಿಫ್ಟ್! – ಹಳದಿ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ

ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ನಂತರ ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ  ನೀಡಲು ರಾಜ್ಯ  ಸರ್ಕಾರ ಹಿಂದೇಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಹಾಗೂ  ನಗರ ಪೊಲೀಸ್ ಆಯುಕ್ತರನ್ನು KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಭೇಟಿಯಾಗಿದ್ದರು.  ಪಂದ್ಯಗಳನ್ನು ನಡೆಸಲು ಅವಕಾಶ ಕೋರಿ ಸರ್ಕಾರಕ್ಕೂ ಮನವಿ ಮಾಡಿದ್ದರು.  ಈ ಸಭೆ ಬಳಿಕ ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ಪೊಲೀಸ್ ಇಲಾಖೆಯಿಂದ ಗ್ರಿನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.

ಬುಧವಾರ ರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ನಿಯಮಗಳನ್ನು ಸೂಚಿಸಿ ಷರತ್ತುಗಳನ್ನು ವಿಧಿಸಿ ಬೆಂಗಳೂರು  ನಗರ ಪೊಲೀಸರು ಅನುಮತಿ ನೀಡುವ ಸಾಧ್ಯತೆ ಇದೆ.

ಈಗಾಗಲೇ ಬೆಂಗಳೂರು ನಗರ ಪೊಲೀಸರು ಸೂಚಿಸಿರುವ ಪ್ರಕಾರ, ಸ್ಟೇಡಿಯಂನಲ್ಲಿ ಕೆಲವೊಂದು ಬದಲಾವಣೆ ಮಾಡಲಾಗುತ್ತಿದೆ. ವಿಶೇಷವಾಗಿ ವಿಶಾಲವಾಗಿ ಎಂಟ್ರಿ ಗೇಟ್ ಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಅಗ್ನಿಶಾಮಕ ಪರಿಕರಗಳ ಅಳವಡಿಕೆ ಕಾರ್ಯ ಕೂಡ ನಡೆದಿದೆ. ಅಗ್ನಿಶಾಮಕ ದಳದಿಂದಲೂ ಅನುಮತಿ ಪಡೆಯುವ ಕೆಲಸ ನಡೆಯುತ್ತಿದೆ. ಸ್ಟೇಡಿಯಂನೊಳಗೆ ಅಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳು ಬರುವಂತೆ ವಿಶಾಲವಾಗಿ ಎಂಟ್ರಿ, ಎಕ್ಸಿಟ್ ಗೇಟ್ ನಿರ್ಮಿಸುವಂತೆ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸೂಚಿಸಿದ್ದರು.  ಅದರಂತೆ ಈಗ ನಿರ್ಮಾಣ ಕಾರ್ಯ ನಡೆಯುತ್ತಿದೆ.

Shwetha M