ಲಂಚ ಪಡೆಯುವಾಗ ಲೋಕ ಬಲೆಗೆ ಬಿದ್ದ PDO ಮಂಜುಳಾ – ಬಂಧನದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆ ನಾಟಕ!

ಲಂಚ ಪಡೆಯುವಾಗ ಲೋಕ ಬಲೆಗೆ ಬಿದ್ದ PDO ಮಂಜುಳಾ – ಬಂಧನದಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆ ನಾಟಕ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ಪಿಡಿಒ ಮಂಜುಳಾ  ಲೋಕಾ ಬಲೆಗೆ ಬಿದ್ದಿದ್ದಾರೆ.ಮೃತ ನೀರುಗಂಟಿಯ ಬಾಕಿ ಸಂಬಳ ಬಿಡುಗಡೆ ಮಾಡಲು 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟು, 25,000 ರೂ. ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.ಬಂಧನದಿಂದ ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಹರಿತ ಆಯುಧದಿಂದ ಕೈ ಕೊಯ್ದುಕೊಂಡು ನಾಟಕವಾಡಿದ್ದಾರೆ. ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು, ಲೋಕಾಯುಕ್ತ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಭಾರತಕ್ಕೆ ರಾಜತಾಂತ್ರಿಕ ಗೆಲುವು – LPG ಹೊತ್ತು ಬಂದ ಎರಡು ಹಡಗು

ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿದ್ದ ಸ್ವಾಮಿ ಎಂಬುವವರು ನಿಧನರಾದ ಬಳಿಕ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ಸಿಕ್ಕಿತ್ತು. ಮೃತ ಸ್ವಾಮಿ ಅವರ ಎರಡು ವರ್ಷದ ಬಾಕಿ ಸಂಬಳ ಸುಮಾರು 4 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಪಿಡಿಒ ಮಂಜುಳಾ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಲಂಚ ನೀಡಲು ಇಚ್ಛಿಸದ ಮಹದೇವ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಕಚೇರಿಯಲ್ಲಿ ಮುಂಗಡವಾಗಿ 25 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಂಜುಳಾ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಕಂಗಾಲಾದ ಮಂಜುಳಾ, ಕಚೇರಿಯಲ್ಲೇ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ರಾದ್ಧಾಂತ ಮಾಡಿದ್ದಾರೆ. ಅಧಿಕಾರಿಗಳ ಮುಂದೆಯೇ ಹೈಡ್ರಾಮಾ ಸೃಷ್ಟಿಸಿ ತನಿಖೆಗೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ಗಾಯಗೊಂಡ ಪಿಡಿಒ ಮಂಜುಳಾ ಅವರನ್ನು ತಕ್ಷಣವೇ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಯ ನಂತರ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದುವರಿಸಲಿದ್ದಾರೆ.

Kishor KV