ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿನೀರಾನೆ ದಾಳಿ – ಚಿಕಿತ್ಸೆ ಫಲಕಾರಿಯಾಗದೇ ವೈದ್ಯೆ ಸಾವು!

ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ರಾತ್ರಿ 11.45ರ ಸುಮಾರಿಗೆ ನಡೆದ ಈ ಘಟನೆಯಲ್ಲಿ ಡಾ.ಸಮೀಕ್ಷಾ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತುರ್ತಾಗಿ ಶಸ್ತ್ರಚಿಕಿತ್ಸೆಯನ್ನೂ ವೈದ್ಯರು ನಡೆಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸಿದ ಪಶುವೈದ್ಯೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಕೊನೆಯುಸಿರು ಎಳೆದಿದ್ದಾರೆ. ಡಾ.ಸಮೀಕ್ಷಾ ಇತ್ತೀಚೆಗಷ್ಟೇ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಕುಟುಂಬಕ್ಕೆ ಮಣೆಯೂ.. ಹೊಸಬರಿಗೆ ಹೊಣೆಯೋ – ಕಾಂಗ್ರೆಸ್ ಗೆ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟು!
ಗರ್ಭಿಣಿ ಆಗಿದ್ದ ನೀರಾನೆ ಇನ್ಜು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದನ್ನು ಪರೀಕ್ಷಿಸಿಲು ತೆರಳಿದ್ದಾರೆ. ಈ ವೇಳೆ ಆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.
ನೀರಾನೆ ದಾಳಿಯಿಂದ ಪಶು ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ನೋಡಿರಿ

