ಆಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಗರಣ – 40 ಸಿಬ್ಬಂದಿ ಕೆಲಸದಿಂದ ವಜಾ, ಯೋಗಿ ಖಡಕ್ ಎಚ್ಚರಿಕೆ

ರಾಮಮಂದಿರ ಹಗರಣ ಈಗ ದೇಶದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಇಡೀ ದೇಶ ಚಿತ್ತ ಆಯೋಧ್ಯೆ ಕಡೆ ನೆಟ್ಟಿದೆ.ಅಯೋಧ್ಯೆಯ ಶ್ರೀ ರಾಮ ಮಂದಿರ ದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಲಾಗಿದೆ. ಸಿಎಂ ಯೋಗಿ ಅವರಿಗೆ ವರದಿ ಸಲ್ಲಿಕೆಯಾದ ಬಳಿಕ ತಪ್ಪು ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಹರಿಣಗಳ ಮುಂದೆ ಮಂಡಿಯೂರಿದ ಭಾರತದ ವನಿತೆಯರು – ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಟೀಮ್ ಇಂಡಿಯಾ
ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಹಣ ಮತ್ತು ಆಭರಣಗಳ ಎಣಿಕೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಿಸಲಾಗಿದೆ. ಮತ್ತೊಂದೆಡೆ, ಆರು ದಿನಗಳ ಕಾಲ ಅಯೋಧ್ಯೆಯಲ್ಲೇ ಬೀಡುಬಿಟ್ಟು ತನಿಖೆ ನಡೆಸಿದ SIT ಇಂದು ತನ್ನ ಪ್ರಾಥಮಿಕ ವರದಿಯನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸಲಿದೆ.ದೇಣಿಗೆಯ ಹಳೆಯ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಗದು ಎಣಿಕೆ ಮಾಡುವ ವಿಧಾನಗಳು ಮತ್ತು ಆಭರಣಗಳ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಿದೆ. ದೇವಸ್ಥಾನದ ಟ್ರಸ್ಟ್ಗೆ ಸಂಬಂಧಿಸಿದ ಪ್ರಮುಖರು, ಅರ್ಚಕರು, ಬ್ಯಾಂಕ್ ಅಧಿಕಾರಿಗಳು ಮತ್ತು ನಗದು ನಿರ್ವಹಣಾ ಸಿಬ್ಬಂದಿ ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಹಳೆಯ ಸಿಬ್ಬಂದಿ ತನಿಖೆ ಮುಗಿಯುವವರೆಗೆ ಅಯೋಧ್ಯೆ ನಗರವನ್ನು ಬಿಟ್ಟು ಹೊರಗೆ ಹೋಗಬಾರದು ಎಂದು ಎಸ್ಐಟಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ದೀರ್ಘಕಾಲದ ಸಹಚರ ಎನ್ನಲಾದ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಎಂಬಾತನನ್ನು ಎಸ್ಐಟಿ ಪದೇ ಪದೇ ವಿಚಾರಣೆ ನಡೆಸಿದೆ. ಈತನ ಆಪ್ತರು, ಸಂಬಂಧಿಕರು ಹಾಗೂ ಆಸ್ತಿಪಾಸ್ತಿಗಳ ವಿವರವನ್ನೂ ಕಲೆಹಾಕಲಾಗುತ್ತಿದೆ. 2025 ರ ಆರಂಭದಲ್ಲಿ ಪ್ರಯಾಗ್ರಾಜ್ನಲ್ಲಿ ನಡೆದ ‘ಮಹಾಕುಂಭ ಮೇಳ’ದ ಸಮಯದಲ್ಲಿ ಈ ದೊಡ್ಡ ವಂಚನೆ ನಡೆದಿದೆ. ಆ ಎರಡು ತಿಂಗಳ ಅವಧಿಯಲ್ಲಿ ಪ್ರತಿದಿನ ಸುಮಾರು 10 ಲಕ್ಷ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡುತ್ತಿದ್ದರು. ಭಕ್ತರ ದಟ್ಟಣೆ ಎಷ್ಟಿತ್ತೆಂದರೆ, ದೇವಸ್ಥಾನದ ದೇಣಿಗೆ ಪೆಟ್ಟಿಗೆಗಳು ಕೇವಲ ಎರಡು ಗಂಟೆಗಳಲ್ಲಿ ನೋಟುಗಳಿಂದ ತುಂಬಿ ಹೋಗುತ್ತಿದ್ದವು. ಇದೇ ಸಮಯವನ್ನು ಬಳಸಿಕೊಂಡು ದೊಡ್ಡ ಮಟ್ಟದಲ್ಲಿ ಹಣ ಲೂಟಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ನೋಡಿರಿ

