ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪ್ಯಾಡ್‌ನಲ್ಲಿ ಬೆಂಕಿ – ತಪ್ಪಿದ ಅನಾಹುತ..!

ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪ್ಯಾಡ್‌ನಲ್ಲಿ ಬೆಂಕಿ – ತಪ್ಪಿದ ಅನಾಹುತ..!

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಘಟನೆ ಬೆನ್ನಲ್ಲೇ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದ ಡಿ.ಕೆ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್‌ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್‌ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ:  ‘ಪತ್ನಿಯ ಗ್ರಹ ಗತಿಯೇ ನಿಮ್ಮನ್ನು ಕಾಪಾಡಿದೆ’ – ಘಟನೆಯನ್ನು ಹಗುರವಾಗಿ ಪರಿಗಣಿಸದಂತೆ ಡಿಕೆಶಿಗೆ ಖ್ಯಾತ ಜ್ಯೋತಿಷಿ ಸಲಹೆ

ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಅಭ್ಯರ್ಥಿಗಳ ಪರ ಮತ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಸಭೆಗೆ ಡಿಕೆಶಿ ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಡಿಕೆಶಿ ಆಗಮಿಸುತ್ತಿದ್ದಂತೆ ಹೆಲಿಕಾಪ್ಟರ್‌ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್‌ನಿಂದ ಹೆಲಿಪ್ಯಾಡ್ ನಲ್ಲಿದ್ದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಹೊನ್ನಾವರಕ್ಕೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ 10 ನಿಮಿಷಗಳಿಗೂ ಹೆಚ್ಚು ಕಾಲ ರುದ್ರಾಕ್ಷಿ ಜಪ ಮಾಡಿದ್ದರು. ಬಳಿಕ ಗೋಪುರದ ಮುಂದೆ ಈಡುಗಾಯಿ ಸೇವೆ ನೆರವೇರಿಸಿದ್ದರು.

ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು.

suddiyaana