ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಅನುಮೋದನೆ

ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಆಟೋ ರಿಕ್ಷಾ, ಸಿಟಿ ಬಸ್, ಮೆಟ್ರೊ ರೈಲು ಸೇರಿದಂತೆ ನಗರದ ಎಲ್ಲ ಸಾರಿಗೆ ವ್ಯವಸ್ಥೆಯನ್ನು ಒಂದೇ ಸೂರಿನಡಿ ತರುವ ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಕೊನೆಗೂ ಅನುಮೋದನೆ ದೊರೆತಿದೆ. ಬೆಂಗಳೂರಿನ ಸಂಚಾರ ಬಿಕ್ಕಟ್ಟಿನ ನಿರ್ವಹಣೆಗೆ ಈ ವಿಧೇಯಕ ನೆರವಾಗಲಿದೆ ಎನ್ನಲಾಗಿದೆ. ಈ ವಿಧೇಯಕ ರಾಷ್ಟ್ರೀಯ ನಗರ ಸಾರಿಗೆ ನೀತಿಗೆ ಪೂರಕವಾಗಿದೆ. ಸಮಗ್ರ ಸಾರಿಗೆ ಯೋಜನೆಯನ್ನು ಸಕ್ರಿಯಗೊಳಿಸುವುದಕ್ಕಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳನ್ನು ಒಂದು ಚೌಕಟ್ಟಿನಡಿ ತರಲು ನೆರವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ :  ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಆಯ್ಕೆ – ವಿಧಾನಸಭೆಯ ಕಲಾಪದಲ್ಲಿ ಸದಸ್ಯರ ಅಭಿನಂದನೆ

ಬೆಂಗಳೂರು ನಗರ ಸಾರಿಗೆ ವ್ಯವಸ್ಥೆಯು ‘ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ’ದ ಅಡಿ ಬರಲಿದೆ. ಸುಮಾರು 279 ಚದರ ಕಿಲೋಮೀಟರ್ ವ್ಯಾಪ್ತಿಗೆ ಕಾಯ್ದೆ ಅನ್ವಯವಾಗಲಿದೆ. ಎಲ್ಲ ಸಾರ್ವಜನಿಕ ಸಾರಿಗೆಗಳನ್ನು ಸಂಯೋಜಿಸಿ ಹೊಸ ಪ್ರಾಧಿಕಾರ ರಚಿಸಲಾಗುವುದು. ನಗರ ಸಂಚಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಪ್ರಾಧಿಕಾರ ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ. ಬೆಂಗಳೂರು ಸೂಕ್ತ ಯೋಜನೆಯೊಂದಿಗೆ ಅಭಿವೃದ್ಧಿಹೊಂದಿಲ್ಲ. ನಗರ ಬೆಳೆದಿರುವುದಕ್ಕೆ ತಕ್ಕಂತೆ ರಸ್ತೆಗಳ ಅಗಲೀಕರಣವಾಗಿಲ್ಲ. ಪ್ರತಿ ದಿನ ಹೊಸದಾಗಿ 5,000 ವಾಹನಗಳು ರಸ್ತೆಗಿಳಿಯುತ್ತಿವೆ. ನಗರವು 1.3 ಕೋಟಿ ಜನಸಂಖ್ಯೆ ಹೊಂದಿದ್ದು, ಶೀಘ್ರದಲ್ಲೇ ವಾಹನಗಳ ಸಂಖ್ಯೆ ಇದನ್ನೂ ಮೀರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಭೂ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿದ್ದರೆ, ಬೆಂಗಳೂರು ಉಸ್ತುವಾರಿ ಸಚಿವರು ಮತ್ತು ರಾಜ್ಯ ಸಾರಿಗೆ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಸದಸ್ಯರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಬೆಂಗಳೂರು ನಗರ ಮೇಯರ್, ಪೊಲೀಸ್ ಆಯುಕ್ತರು, ಸರ್ಕಾರದ ವಿವಿಧ ಏಜೆನ್ಸಿಗಳ ಪ್ರತಿನಿಧಿಗಳು ಇರಲಿದ್ದಾರೆ.

suddiyaana