ಅಯೋಧ್ಯೆಗೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ ಕೊಟ್ಟ ಕರ್ನಾಟಕದ ಅನಾಮಿಕ ಭಕ್ತ!

ಅಯೋಧ್ಯೆಗೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ ಕೊಟ್ಟ ಕರ್ನಾಟಕದ ಅನಾಮಿಕ ಭಕ್ತ!

ಭಾರತೀಯ ಸಂಸ್ಕೃತಿಯಲ್ಲಿ ಶ್ರೀ ರಾಮನಿಗೆ ವಿಶೇಷ ಸ್ಥಾನಮಾನವಿದೆ. ಹೀಗಾಗೇ ಅಯೋಧ್ಯೆ ರಾಮಮಂದಿರಕ್ಕೆ ಲಕ್ಷಾಂತರ ಜನ ಭೇಟಿ ನೀಡುತ್ತಿದ್ದಾರೆ. ಇದೀಗ ಶ್ರೀರಾಮಿನಿಗೆ ಅನಾಮಿಕ ಭಕ್ತರೊಬ್ಬರು ಕೋಟ್ಯಂತರ ಮೌಲ್ಯಯದ ಚಿನ್ನದ ರಾಮನ ಮೂರ್ತಿಯನ್ನ ಕೊಡುಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ದೊಡ್ಮನೆಗೆ ಬರ್ತಿದ್ದಂತೆ ರಕ್ಷಿತಾ ಶೆಟ್ಟಿಗೆ ಅಮ್ಮನಿಂದ ಕ್ಲಾಸ್! – ರಕ್ಷಿತಾ ತಾಯಿ ಬಳಿ ಕ್ಷಮೆ ಕೇಳಿದ ಧ್ರುವಂತ್

ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ  ಶ್ರೀರಾಮ ಮಂದಿರಕ್ಕೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿಯನ್ನು ಕೊಡುಗೆ ನೀಡಿದ್ದಾರೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಡಾ.ಅನಿಲ್ ಮಿಶ್ರಾ ಮಾಹಿತಿ ನೀಡಿದ್ದಾರೆ. ವಜ್ರ, ಪಚ್ಚೆ ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ ಹಾಗೂ 8 ಅಡಿ ಅಗಲದ ರಾಮನ ಮೂರ್ತಿಯನ್ನು ದಾನ ನೀಡಿದ್ದಾರೆ. ಆದರೆ ದಾನ ನೀಡಿದವರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕರ್ನಾಟಕ ಮೂಲದ ಅನಾಮಿಕ ಭಕ್ತರೊಬ್ಬರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ದಕ್ಷಿಣ ಭಾರತದ ಸಾಂಪ್ರದಾಯಿಕ ಶಿಲ್ಪಕಲಾ ಶೈಲಿಯಲ್ಲಿ ರಚಿಸಲಾದ ಈ ಪ್ರತಿಮೆಯ ಮೌಲ್ಯ ಅಂದಾಜು 25-30 ಕೋಟಿ ರೂ. ಎನ್ನಲಾಗಿದೆ.  ಸಂಪೂರ್ಣ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು. ತಂಜಾವೂರಿನ ನುರಿತ ಕುಶಲಕರ್ಮಿಗಳು ಮೂರ್ತಿಯ ಕೆತ್ತನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದಕ್ಕೆ ಕಲಾತ್ಮಕ ಮತ್ತು ಭವ್ಯವಾದ ನೋಟವನ್ನು ನೀಡಿದ್ದಾರೆ. ವಜ್ರಗಳು, ಪಚ್ಚೆಗಳು, ನೀಲಮಣಿಗಳು ಮತ್ತು ಚಿನ್ನದಿಂದ ಕೂಡಿದ್ದು, ಬಳಸಿದ ನಿಖರವಾದ ಲೋಹವನ್ನು ತಜ್ಞರು ಗುರುತಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ಡಿಸೆಂಬರ್ 29ರಿಂದ 2026ರ ಜನವರಿ 2ರವರೆಗೆ ಆಚರಿಸಲಾಗುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾ ದ್ವಾದಶಿಗೆ ಸಿದ್ಧತೆಗಳು ಪ್ರಾರಂಭವಾಗಿವೆ. ಗರ್ಭಗುಡಿಯಲ್ಲಿ ಬೆಳಿಗ್ಗೆ 9:30ರಿಂದ ಮಧ್ಯಾಹ್ನದವರೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶ್ರೀ ರಾಮ ಅಭಿಷೇಕ, ಶೃಂಗಾರ, ಭೋಗ ಮತ್ತು ಪ್ರಕತ್ಯ ಆರತಿ ನೆರವೇರಲಿದೆ.

ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಮೂರ್ತಿಯನ್ನು ಅನಾವರಣಗೊಳಿಸಲಾಗುವುದು, ನಂತರ ದೇಶಾದ್ಯಂತ ಸಂತರು ಮತ್ತು ಮಹಾಂತರು ಭಾಗವಹಿಸುವ ಪವಿತ್ರೀಕರಣ ಸಮಾರಂಭ ನಡೆಯಲಿದೆ.

Shwetha M