ನಾಗರಹೊಳೆ ಹಾಗೂ ಬಂಡಿಪುರ ಸಫಾರಿ ಕ್ಲೋಸ್ – ಅರಣ್ಯ ಸಚಿವ ಖಂಡ್ರೆ ಆದೇಶ

ನಾಗರಹೊಳೆ ಹಾಗೂ ಬಂಡಿಪುರ ಸಫಾರಿ ಕ್ಲೋಸ್ – ಅರಣ್ಯ ಸಚಿವ ಖಂಡ್ರೆ ಆದೇಶ

  ನಾಗರಹೊಳೆ ಹಾಗೂ ಬಂಡಿಪುರ ಸಫಾರಿಯನ್ನು  ಹಾಗೂ ಮಾನವ- ವನ್ಯಜೀವಿ ಸಂಘರ್ಷ  ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ ಖಂಡ್ರೆ  ಸೂಚಿಸಿದ್ದಾರೆ.

ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ SLOT ಚೇಂಜ್ ಗುಮ್ಮ – ನಂ.3 ದುಬೆ.. ಟಾಪ್ ಆರ್ಡರ್ ಕಥೆ?

 ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮನುಷ್ಯರು ಮಾತ್ರವಲ್ಲದೆ ಜಾನುವಾರುಗಳ ಮೇಲೂ ಹುಲಿ ದಾಳಿ ನಡೆಸುತ್ತಿದ್ದು ಮೇಯಲು ಹೋದ ಪ್ರಾಣಿಗಳ ಜೊತೆಗೆ, ಕೊಟ್ಟಿಗೆಗೂ ನುಗ್ಗಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಪದೇ ಪದೇ ಹುಲಿ ದಾಳಿ ಹಿನ್ನಲೆ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಹೆದರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಂಜನಗೂಡು ತಾಲೂಕಿನ ಉಪ್ಪನಹಳ್ಳಿಯಲ್ಲಿ ರೈತ ಸಣ್ಣಮಾದಯ್ಯ ಎಂಬವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ್ದ ಹುಲಿ ಮೇಕೆಯನ್ನು ಕೊಂದು ತಿಂದಿತ್ತು. ಕಾಡಂಚಿನ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ವ್ಯಾಘ್ರ, ಊರಿಗೇ ಎಂಟ್ರಿ ಕೊಟ್ಟಿರೋದು ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿತ್ತು. ಮೈಸೂರು ಭಾಗದಲ್ಲಿ ನಿರಂತರ ಹುಲಿ ದಾಳಿ ಪ್ರಕರಣ ಹಿನ್ನಲೆ ಅರಣ್ಯ ಇಲಾಖೆ ವಿರುದ್ಧ ಈಗಾಗಲೇ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆಯನ್ನೂ ನಡೆಸಿತ್ತು. ಹೀಗಿದ್ದರೂ ಹುಲಿ ದಾಳಿ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು.


Kishor KV