ಶಾಸಕ ಬೈರತಿ ಬಸವರಾಜ್ ಸೇಫ್ ಆದ್ರಾ? – ಕೋರ್ಟ್ ಕೊಟ್ಟ ಆದೇಶವೇನು?

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಶಾಸಕ ಬೈರತಿ ಬಸವರಾಜ್ , ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್, ಪ್ರಕರಣದಲ್ಲಿ ಎ5 ಭೈರತಿ ಬಸವರಾಜ್ ಪಾತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೈಕೋರ್ಟ್ಗೆ ನೀಡಿದ್ದ ಮಾಹಿತಿಯನ್ನು ಸಲ್ಲಿಸುವಂತೆ ಎಸ್ಪಿಪಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.
ಬೈರತಿ ಬಸವರಾಜ್ ಪರ ಸಂದೇಶ್ ಚೌಟ ವಾದ ಮಂಡಿಸಿ, ಕೊಲೆಯಲ್ಲಿ ಬೈರತಿ ಬಸವರಾಜ್ ಪಾತ್ರ ಇಲ್ಲ. ಆದರೂ ಅವರನ್ನು ಕೇಸ್ನಲ್ಲಿ ಐದನೇ ಆರೋಪಿಯನ್ನಾಗಿ ಮಾಡಲಾಗಿದೆ. ಸಿಐಡಿಗೆ ಪ್ರಕರಣ ವರ್ಗಾವಣೆ ಆದ ನಂತರ ನೋಟಿಸ್ ನೀಡಿಲ್ಲ. ಸಮನ್ಸ್ ನೀಡದೆ ವಿಚಾರಣೆಗೆ ಹಾಜರಾಗಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಸಿಐಡಿ ಪರ ವಕೀಲ, ಎಸ್ಪಿಪಿ ಅಶೋಕ್ ನಾಯಕ್ ಪ್ರಬಲ ವಾದ ಮಂಡಿಸಿದ್ದು, ಶಾಸಕನಾದರೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಾರೆ. ಹತ್ಯೆಗೆ ಮುನ್ನಾ ಶಾಸಕನ ವಿರುದ್ಧ ಬಿಕ್ಲು ಶಿವ ದೂರು ನೀಡಿದ್ದ. ಎ1 ಜಗದೀಶ್ ಮತ್ತು ಎ5 ಬೈರತಿ ಬಸವರಾಜ್ ಇಬ್ಬರು ಕುಂಭಮೇಳಕ್ಕೆ ಹೋಗಿದ್ದರು. ಅಲ್ಲಿಗೆ ಹೋಗುವ ಮುನ್ನ ಕೊಲೆ ಸಂಚು ರೂಪಿಸಿದ್ದರು. ಆರೋಪಿಗಳು ಇಬ್ಬರೂ ಒಂದೇ ಕಡೆ ಇದ್ದ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಯ್ಯಯ್ಯೋ.. ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ 3 ಗಂಟೆ ಲಾಕ್ ಆದ ರೈತ!
ಇನ್ನು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 18 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಸೋಮವಾರ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿಯ ಶಾಸಕ ಬೈರತಿ ಬಸವರಾಜು ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಹಿನ್ನೆಲೆ ಹಾಗೂ ತನಿಖೆ ಬಾಕಿ ಇರುವ ಕಾರಣ ಸದ್ಯದ ಆರೋಪ ಪಟ್ಟಿಯಿಂದ ಅವರ ಹೆಸರನ್ನು ಹೊರಗಿಡಲಾಗಿದೆ.
ಬೆಂಗಳೂರಿನ ಹಲಸೂರು ಕೆರೆಯ ಸಮೀಪ 2025ರ ಜುಲೈನಲಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಬಿಎನ್ಎಸ್ ಸೆಕ್ಷನ್ 103, 190 ಅಡಿ ಪ್ರಕರಣ ದಾಖಲಾಗಿತ್ತು.

ನೋಡಿರಿ

