ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ ದುರಂತ – ಇಂದಿನಿಂದ ಸಿಐಡಿ ತನಿಖೆ ಆರಂಭ

ಜೂ.4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿದಲ್ಲಿ 11 ಜನ ಮೃತಪಟ್ಟಿದ್ದರು. ಸಂಭ್ರಮಾಚರಣೆ ವೇಳೆ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿತ್ತು. ಈ ಘಟನೆ ಬೆನ್ನಲ್ಲೇ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಹೈಕೋರ್ಟ್ ಸುಮೋಟೋ ಕೇಸ್ ದಾಖಲಿಸಿಕೊಂಡಿತ್ತು.ಇದೀಗ ಈ ಕಾಲ್ತುಳಿತ ಪ್ರಕರಣದ ಸಿಐಡಿ ತನಿಖೆ ಇಂದು ಆರಂಭವಾಗಿದೆ. ಎಸ್ಪಿ ಶುಭನ್ವಿತಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಇದನ್ನೂ ಓದಿ: ವಿರಾಟ್ ಕೊಹ್ಲಿ ಅರೆಸ್ಟ್ ಟ್ರೆಂಡ್ – 18 ವರ್ಷ.. 1 ಟೀಂ.. ಗೆದ್ದಿದ್ದೇ ತಪ್ಪಾ?
ಡಿವೈಎಸ್ಪಿ ಗೌತಮ್ ಹಾಗೂ ಪುರುಷೋತ್ತಮ್ ಅವರನ್ನು ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಈಗಾಗಲೇ ಕೇಸ್ ಫೈಲನ್ನು ಕಬ್ಬನ್ ಪಾರ್ಕ್ ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕಾಲ್ತುಳಿತ ಉಂಟಾದ ಸ್ಥಳಕ್ಕೆ ಸಿಐಡಿ ತಂಡ ಭೇಟಿ ನೀಡಲಿದೆ.
ನೂಕು ನುಗ್ಗಲು ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21ರ ಬಳಿ ಸಿಐಡಿ ತಂಡ ಪರಿಶೀಲನೆ ನಡೆಯಲಿದೆ. ಘಟನಾ ಸ್ಥಳ ಪರಿಶೀಲನೆ ಬಳಿಕ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಐಡಿ ತಂಡ ತಯಾರಿ ನಡೆಸಲಿದೆ. ಬಹುತೇಕ ಸೋಮವಾರ ಬಾಡಿ ವಾರೆಂಟ್ ಮೇಲೆ ಬಂಧಿತ ನಾಲ್ವರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಶನಿವಾರ ಸರ್ಕಾರಿ ರಜೆ ಮತ್ತು ನಾಳೆ ಭಾನುವಾರವಾದ್ದರಿಂದ ನ್ಯಾಯಾಲಯಕ್ಕೆ ರಜೆ ಇದ್ದು, ಸೋಮವಾರ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆದಿದೆ.