ಕರ್ನಾಟಕ ವಿಧಾನಪರಿಷತ್‌ನ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಕರ್ನಾಟಕ ವಿಧಾನಪರಿಷತ್‌ನ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಈ ಕುರಿತು ಅಧಿಕೃತ ಘೋಷಣೆ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

ಇದನ್ನೂ ಓದಿ: ಶಿವಾನಂದ ಪಾಟೀಲ್​ ಹೇಳಿಕೆಗೆ ಬಿಜೆಪಿ, ಜೆಡಿಎಸ್‌ ನಾಯಕರ ಆಕ್ರೋಶ – ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದ ಸಚಿವ

ಇನ್ನು ವಿಧಾನಪರಿಷತ್‌ ನ ವಿಪಕ್ಷ ನಾಯಕನ ಆಯ್ಕೆ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ಸಹ ನೇಮಕ ಮಾಡಲಾಗಿದ್ದು, ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹಾಗೂ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಕ್ಕೆ ಅರವಿಂದ್ ಬೆಲ್ಲದ್​ ಅಸಮಾಧಾನಗೊಂಡಿದ್ದರು. ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಅರವಿಂದ ಬೆಲ್ಲದ್ ಅವರನ್ನು ಸಮಾಧಾನಪಡಿಸಲು ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ಇನ್ನು ವಿಪಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್​ ರವಿ ಕುಮಾರ್ ಅವರಿಗೆ ವಿಧಾನಪರಿಷತ್​ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.

Shwetha M