ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದೆ. ನವೆಂಬರ್‌ 25, 26 ರಂದು ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದೆ. ಐತಿಹಾಸಿಕ ಕ್ಷಣಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್‌ ಶೆಟ್ಟಿ ಈ ವಿಚಾರ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕಂಬಳಕ್ಕೆ ಕೌಂಟ್‌ಡೌನ್ – ಅನುಷ್ಕಾ ಶೆಟ್ಟಿಯಿಂದ ಕಂಬಳ ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯಲಿದ್ದು, ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದೆ. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲಾ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುತ್ತೆದೆ. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ, ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ.

ಇನ್ನು ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಕೂಡ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

Shwetha M