ಸಿಎಂ ಸಿದ್ದರಾಮಯ್ಯರಿಗೆ ಮತ್ತೆ ಮುಡಾ ಸಂಕಷ್ಟ – ಸಿಬಿಐ ತನಿಖೆ ಕೋರಿ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ

ಮುಡಾ ನಿವೇಶನ ಹಂಚಿಕೆ ಕೇಸ್ ಸಿದ್ದರಾಮಯ್ಯರನ್ನ ಬಿಟ್ಟು ಬಿಡದೆ ಕಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ದೂರುದಾರ ಮತ್ತು ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಬುಧವಾರ ಸಿಬಿಐ ತನಿಖೆ ಕೋರಿ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನಗಳ ಹಂಚಿಕೆ ಬಗ್ಗೆ ಲೋಕಾಯುಕ್ತ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಅವರ ವಿರುದ್ಧದ ಆರೋಪಗಳನ್ನು ಬೆಂಬಲಿಸುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಆರೋಪಿಗಳ ಪರವಾಗಿ ವರದಿ ಪಡೆಯಲು ಸಿದ್ದರಾಮಯ್ಯ ಲೋಕಾಯುಕ್ತ ಸಂಸ್ಥೆಯ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮುಡಾದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಯ ಅಗತ್ಯವನ್ನು ಪುನರುಚ್ಚರಿಸಿದ ಸ್ನೇಹಮಯಿ, 14 ನಿವೇಶನಗಳ ಹಂಚಿಕೆಯಲ್ಲಿ ಮಾತ್ರವಲ್ಲದೆ, ಸಾವಿರಾರು ಇತರ ನಿವೇಶನಗಳ ಹಂಚಿಕೆಯಲ್ಲಿನ ಗಂಭೀರ ಲೋಪಗಳ ಬಗ್ಗೆಯೂ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.