ರಣರಂಗವಾದ ಕೆಪಿಸಿಸಿ ಕಚೇರಿ! – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ!

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಮೂಲಕ ಯುವ ಕಾಂಗ್ರೆಸ್ನ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದ್ದು, ಸಭೆಯು ರಣರಂಗವಾಗಿ ಮಾರ್ಪಟ್ಟಿದೆ.
ಇದನ್ನೂ ಓದಿ: ಅಯ್ಯಯ್ಯೋ.. ವೇದಿಕೆಯಲ್ಲೇ ಆ ಪದ ಬಳಸಿದ ನ್ಯಾಷನಲ್ ಕ್ರಶ್! – ** ಮಾತಿನ ಬೆನ್ನಲ್ಲೇ ಕ್ಷಮೆ ಕೇಳಿದ ರಶ್ಮಿಕಾ ಮಂದಣ್ಣ!
NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಸಭೆ ಆರಂಭವಾಗುತ್ತಿದ್ದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹಾಗೂ ಮಾಜಿ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ಬೆಂಬಲಿಗರ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ದೀಪಿಕಾ ರೆಡ್ಡಿ ಅವರನ್ನು ಸ್ಥಾನದಿಂದ ಕೈಬಿಟ್ಟ ಕ್ರಮವನ್ನು ವಿರೋಧಿಸಿ ಸಭೆಯಲ್ಲಿ ಘೋಷಣೆಗಳನ್ನು ಕೂಗಲಾರಂಭಿಸಿದರು.
ಈ ವೇಳೆ ಮಂಜುನಾಥ ಗೌಡ ಬೆಂಬಲಿಗರಿಂದ ಪ್ರತಿರೋಧ ವ್ಯಕ್ತವಾಗಿದೆ. ಸಭೆಗೆ ಅಡ್ಡಿಪಡಿಸದಂತೆ ಎಚ್ಚರಿಕೆ ನೀಡಿದಾಗ ಪರಿಸ್ಥಿತಿ ಕೈಮೀರಿದೆ. ಮಾತಿಗೆ ಮಾತು ಬೆಳೆದು ಎರಡೂ ಬಣಗಳ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆಸಿದ್ದಾರೆ. ಸಮಾಧಾನಪಡಿಸಲು ಹಿರಿಯ ನಾಯಕರು ಯತ್ನಿಸಿದರೂ, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಕಾರ್ಯಕರ್ತರು ಕೆಪಿಸಿಸಿ ಕಚೇರಿಯ ಆವರಣದಲ್ಲೇ ಹೊಡೆದಾಟಕ್ಕೆ ಇಳಿದಿದ್ದಾರೆ. ಕೊನೆಗೆ ಅಲ್ಲಿದ್ದ ಹಿರಿಯ ನಾಯಕರು ಕಾರ್ಯಕರ್ತರಯ ಎರಡೂ ಬಣದವರನ್ನು ಸಮಾಧಾನಪಡಿಸಿದ್ದಾರೆ.

ನೋಡಿರಿ

