ಗ್ಯಾರಂಟಿ ಅನುಷ್ಠಾನ ಸಮಿತಿಗೆ ಭಾರೀ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಇತ್ತೀಚೆಗೆ ಹೆಚ್ಚಿನ ಜನಪ್ರಿಯತೆ ಗಳಿಸಿತ್ತು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ನಡುವೆಯೂ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಮುಂದುವರಿದಿದೆ. ಇದೀಗ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು – ದೇಶದ ಅಧಿಕಾರ ತಾತ್ಕಾಲಿಕವಾಗಿ ಬೇರೆಯವರಿಗೆ ಹಸ್ತಾಂತರ
ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ., ತಾಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ. ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದೆ.
ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿಕೆಶಿ ಮಾತನಾಡುತ್ತಾ, ನಾವು ಪ್ರತೀ ತಿಂಗಳು ಗ್ಯಾರಂಟಿ ಹಣ ಕೊಡ್ತೀವಿ ಅಂತ ಹೇಳಿಲ್ಲ ಎಂದು ಹೇಳಿದ್ದರು.