ದೆಹಲಿಯಲ್ಲಿ ಮಳೆಯ ನರ್ತನ, ಯಮುನಾ ಆರ್ಭಟ – ಪ್ರವಾಹ ಭೀತಿಯಲ್ಲಿ ರಾಷ್ಟ್ರ ರಾಜಧಾನಿ ಜನತೆ

ಉತ್ತರ ಭಾರತದಲ್ಲಿ ಭಾರೀ ಮಳೆ ಮುಂದುವರಿದಿದೆ. ದೆಹಲಿಯಲ್ಲಿ ಎಚ್ಚರಿಕೆ ನೀಡಲಾಗಿದ್ದು, ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇತ್ತ ಪಂಜಾಬ್ನಲ್ಲಿ ಸೆ.3ರ ವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನೋಯ್ಡಾ, ಗುರುಗ್ರಾಮ್ ಮತ್ತು ಗಾಜಿಯಾಬಾದ್ ಸೇರಿದಂತೆ ದೆಹಲಿ-NCR ನಲ್ಲಿ ಇಂದೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಹರಿಯಾಣ, ದೆಹಲಿ ಭಾಗದಲ್ಲಿ ಮಳೆ ಹಿನ್ನೆಲೆ ಪ್ರವಾಹ ಸ್ಥಿತಿಯಲ್ಲಿ ಯಮುನಾ ನದಿ ಹರಿಯುತ್ತಿದೆ. ನಿರಂತರ ಮಳೆ ಮುಂದುವರಿದರೆ ಜನವಸತಿ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ತಗ್ಗು ಪ್ರದೇಶದಲ್ಲಿರುವ ಜನರಿಗೆ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ.
ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್ನಲ್ಲಿ ಈವರೆಗೂ 10 ಕ್ಕೂ ಹೆಚ್ಚು ಜಿಲ್ಲೆಗಳು ಜಲಾವೃತಗೊಂಡಿವೆ. ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್ನಾದ್ಯಂತ 1,300 ಕ್ಕೂ ಹೆಚ್ಚು ಗ್ರಾಮಗಳು ಮುಳುಗಿ ಹೋಗಿದ್ದು, 6,582 ಜನರನ್ನು 122 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: 52ನೇ ವಸಂತಕ್ಕೆ ಕಾಲಿಟ್ಟ ಅಭಿನಯ ಚಕ್ರವರ್ತಿ! – ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಸಂಭ್ರಮಿಸಿದ ಕಿಚ್ಚ ಸುದೀಪ್
ಉತ್ತರ ಪ್ರದೇಶದ 22 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಪ್ರತಾಪ್ಗಢ, ಸೋನ್ಭದ್ರ, ಮಿರ್ಜಾಪುರ್, ಭದೋಹಿ, ಜೌನ್ಪುರ್, ಹರ್ದೋಯಿ, ಫರೂಖಾಬಾದ್, ಕನೌಜ್, ಕಾನ್ಪುರ್ ಗ್ರಾಮಾಂತರ, ಬಾಗ್ಪತ್, ಮೀರತ್, ಅಲಿಗಢ, ಮಥುರಾ, ಹತ್ರಾಸ್, ಕಾಸ್ಗಂಜ್ನಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳವಾರ ಬೆಳಗ್ಗೆ ಯಮುನಾ ನದಿಯ ನೀರಿನ ಮಟ್ಟ 205.75 ಮೀಟರ್ಗೆ ಏರಿದ್ದು, ಅಪಾಯದ ಮಟ್ಟ ವನ್ನು ದಾಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಥ್ನಿ ಕುಂಡ್ ಬ್ಯಾರೇಜ್ನಿಂದ 2.07 ಲಕ್ಷ ಕ್ಯೂಸೆಕ್, ವಜೀರಾಬಾದ್ ಬ್ಯಾರೇಜ್ನಿಂದ 67,260 ಕ್ಯೂಸೆಕ್ ಮತ್ತು ಓಖ್ಲಾ ಬ್ಯಾರೇಜ್ನಿಂದ 61,958 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಬೆಳಿಗ್ಗೆ 7 ಗಂಟೆಗೆ ನೀರಿನ ಮಟ್ಟ 205.75 ಮೀಟರ್ಗೆ ಏರಿದ್ದು, ಮೂರು ಬ್ಯಾರೇಜ್ಗಳಿಂದ ಹೆಚ್ಚಿನ ನೀರು ಹೊರಬಿಡಲಾಗಿದೆ. ಹರಿಯಾಣದಿಂದ ಹೆಚ್ಚಿನ ನೀರು ಬಿಡುಗಡೆಯಾಗಿದ್ದು, ದೆಹಲಿಯಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆಂದು ತಿಳಿಸಿದರು.

ನೋಡಿರಿ

