ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ!

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ!

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇ ಅವಾಂತರಗಳ ಗೂಡಾಗಿದೆ. ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಆರಂಭವಾದಾಗಿಂದ ನೂರಾರು ಅಪಘಾತಗಳು ಸಂಭವಿಸಿವೆ. ಸಾಕಷ್ಟು ಮಂದಿ ಈ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದಾಗಿ ಮೃತಪಟ್ಟಿದ್ದಾರೆ. ಇದೀಗ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ ಮಾಡಲು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದುಬಾರಿ ಬಂಗಲೆ.. ಐಷಾರಾಮಿ ಕಾರುಗಳು – ಗೂಗಲ್ ಸಿಇಒ ಸುಂದರ್ ಪಿಚೈ ವಿಲಾಸಿ ಜೀವನ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಪ್ರತಿನಿತ್ಯ ನಡೆಯುತ್ತಿರುವ ಅಪಘಾತಗಳು, ಅಲ್ಲಿ ಆಗಬೇಕಾದ ಕೆಲಸಗಳು, ಮೂಲಭೂತ ಸೌಕರ್ಯಗಳು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲು ತಾಂತ್ರಿಕ ತಂಡ ರಚಿಸಲಿದ್ದು, ಈ ತಂಡ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಲಿದೆ ಎಂದು ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಳವಾಗುವುದಕ್ಕೆ ಕಾರಣಗಳೇನು? ಯಾವ್ಯಾವ ಸ್ಥಳಗಳಲ್ಲಿ ಹೆಚ್ಚಿನ ಅಪಘಾತ ಸಂಭವಿಸುತ್ತದೆ? ಮಳೆಗಾಲದಲ್ಲಿ ನೀರು ರಸ್ತೆಗಳಲ್ಲೇ ನಿಲ್ಲುತ್ತಲಿದೆ. ಇದಕ್ಕೆ ಕಾರಣವೇನು? ಸರ್ವೀಸ್ ರಸ್ತೆಯಲ್ಲೂ ಸಹ ನೀರು ನಿಲ್ಲುತ್ತಾ ಇದೆ. ಇವು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಲಿದೆ? ಇದಕ್ಕೇನು ಪರಿಹಾರ ಏನು? ಹೈವೇಯಲ್ಲಿ ಹಾಕಿರುವ ರಸ್ತೆ ದೀಪಗಳು ಹಾಳಾಗಿದ್ದು, ರಾತ್ರಿ ವೇಳೆ ಸಂಚಾರಕ್ಕೆ ಕಷ್ಟವಾಗುತ್ತಿದೆ.ಅಂಡರ್‌ಪಾಸ್‌ಗಳಲ್ಲಿ ಅನೇಕ ಸಮಸ್ಯೆಗಳಿವೆ.ಚೈನ್‌ಲಿಂಕ್ ಸರಿಯಾಗಿ ಆಗಿಲ್ಲ, ಪಾರ್ಕಿಂಗ್ ಸಮಸ್ಯೆ ಇದೆ. ಎಲೆಕ್ಟ್ರಿಕ್ ಪೋಲ್‌ಗಳ ಸಮಸ್ಯೆ ಇದೆ. ಆಂಬುಲೆನ್ಸ್‌ಗಳ ವ್ಯವಸ್ಥೆ ಇಲ್ಲ. ಇರುವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸ್ಕೈ ವಾಕ್‌ಗಳ ನಿರ್ಮಾಣ ಬಾಕಿ ಇದೆ ಎಂಬಿತ್ಯಾದಿ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಾಗುತ್ತದೆ.

ಇನ್ನು  ಮದ್ದೂರು, ಮಂಡ್ಯ, ಶ್ರೀರಂಗ ಪಟ್ಟಣ ನಗರಗಳಲ್ಲಿ ಅನೇಕ ಸಮಸ್ಯೆಗಳಿವೆ. ಪುಟ್‌ಪಾಥ್ ಸಮಸ್ಯೆಗಳಿವೆ. ಎಕ್ಸಿಟ್ – ಎಂಟ್ರಿ ಪಾಯಿಂಟ್ಸ್‌ಗಳು ಆಗಬೇಕಿದೆ. ಹೀಗೆಯೇ ಇನ್ನೂ ಹಲವು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಹಾಗೆಯೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಹೆದ್ದಾರಿ ಪ್ರಾಧಿಕಾರವು ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದು, ಒಂದು ತಾಂತ್ರಿಕ ತಂಡವನ್ನು ರಚನೆ ಮಾಡಿ, ಅದರಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿಯನ್ನು ಕೊಡಬೇಕೆಂದು ತೀರ್ಮಾನಿಸಲಾಗಿದೆ.

suddiyaana