ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ: ಎಚ್ಡಿಕೆ ಆರೋಪ

ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ: ಎಚ್ಡಿಕೆ ಆರೋಪ

ಬೆಂಗಳೂರು: ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ ಅಂತಾ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ಆ ಮೂರು ಸಂಚು ಯಾವುದು ಅನ್ನೋದನ್ನು ಕೂಡ ಹೆಚ್ ಡಿಕೆ ಸರಣಿ ಟ್ವೀಟ್ ಮಾಡಿ ಹೇಳಿದ್ದಾರೆ.

ಸಂಚು – 1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ

ಸಂಚು – 2: ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ.

ಸಂಚು –  3:  ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.

ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ.ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತುಪ್ಪಕ್ಕೆ ಡಿಮ್ಯಾಂಡಪ್ಪೋ ಡಿಮ್ಯಾಂಡ್ – ಪೂರೈಕೆ ಹೆಚ್ಚಿಸುವಂತೆ ಕೆಎಂಎಫ್ ಗೆ ದುಂಬಾಲು!

ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ ನಲ್ಲಿಯೇ ಕರ್ನಾಟಕದಲ್ಲಿ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್ʼನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ ಎಂದು ಅತಂಕ ವ್ಯಕ್ತಪಡಿಸಿದ್ದಾರೆ.

ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ. ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ.

ಬಿಜೆಪಿ ಡಬಲ್ ಎಂಜಿನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಅಂತಾ ಕಿಡಿಕಾಡಿದ್ದಾರೆ.

ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್ ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ ಅಂತಾ ಹೇಳಿದ್ದಾರೆ.

ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್‌ಡಿ ದೇವೇಗೌಡರು ಪ್ರಧಾನಿ ಆಗಿದ್ದಾಗ ಎಚ್‌ಡಿ ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್ʼಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ. ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್ʼಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಆರೋಪಿಸಿದ್ದಾರೆ.

ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು. ಇಲ್ಲಿನ ಡಬಲ್ ಎಂಜಿನ್ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಅಂತಾ ಕಿಡಿಕಾಡಿದ್ದಾರೆ.

suddiyaana