ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ – ಡಿಶ್ಚಾರ್ಜ್‌ ಯಾವಾಗ?

ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ – ಡಿಶ್ಚಾರ್ಜ್‌ ಯಾವಾಗ?

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು  ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ. ಮೆದುಳಿನಲ್ಲಿ ಮೈಲ್ಡ್‌ ಸ್ಟ್ರೋಕ್‌ ಆಗಿತ್ತು. ಇದೀಗ ಆವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಬುಧವಾರ ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿದ್ದರು.

ಇದನ್ನೂ ಓದಿ: ಬಿಬಿಎಂಪಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್  ಸಾವು – ಡಿ.ಕೆ ಶಿವಕುಮಾರ್ ಸಂತಾಪ

“ಗೋಲ್ಡನ್ ಅವರ್” ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ  ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿಯವರು ಹೇಳಿದ್ದಾರೆ.

ನೆಗಡಿ, ಮೈ ನೋವು, ಜ್ವರದಿಂದ ಬಳಳುತ್ತಿದ್ದಾರೆ. ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದು ವೈದ್ಯರು ಹೇಳಿದ್ದಾರೆ. ಪ್ಯಾನಿಕ್ ಆಗಲು ಯಾವುದೇ ಕಾರಣವಿಲ್ಲ. ಜನರು ವದಂತಿಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದ್ದಾರೆ.

ಕುಮಾರಸ್ವಾಮಿಯವರು ಎರಡು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅಲ್ಲದೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು, ಕುಮಾರಸ್ವಾಮಿಯವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

suddiyaana