ರಾಜ್ಯ ವಿಧಾನಸಭಾ ಅಧಿವೇಶನ – ನೂತನ ಶಾಸಕರ ಪ್ರಮಾಣವಚನ ಸ್ವೀಕಾರ

ರಾಜ್ಯ ವಿಧಾನಸಭಾ ಅಧಿವೇಶನ – ನೂತನ ಶಾಸಕರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸರ್ಕಾರದ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದೆ. ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮೇ 22ರಿಂದ ಮೇ 24 ರವರೆಗೆ ನಡೆಯಲಿರುವ ವಿಧಾನಸಭೆ ಅಧಿವೇಶನ ಸೋಮವಾರ ಬೆಳಗ್ಗೆ 11.15ರ ಹೊತ್ತಿಗೆ ಆರಂಭವಾಗಿದೆ. ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಮೂರನೇ ದಿನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.

ಇದನ್ನೂ ಓದಿ: ವರುಣನ ಆರ್ಭಟಕ್ಕೆ ಬೆಳೆ ಹಾನಿ –  ರಾಜ್ಯದಲ್ಲಿ ಹಣ್ಣು, ತರಕಾರಿ ಬೆಲೆ ಏರಿಕೆ ಭೀತಿ

ಶಾಸಕರಿಗೆ ಪ್ರಮಾಣವಚನ ಬೋಧಿಸುವ ಜವಾಬ್ದಾರಿಯನ್ನು ಹಳಿಯಾಳ ವಿಧಾನ ಸಭಾ ಕ್ಷೇತ್ರದ ಆರ್.ವಿ.ದೇಶಪಾಂಡೆ ಅವರಿಗೆ ವಹಿಸಲಾಗಿದ್ದು, ಸೋಮವಾರ ಬೆಳಿಗ್ಗೆ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ಮೊದಲ ದಿನದ ಅಧಿವೇಶನದಲ್ಲಿ ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದ್ದಾರೆ. ಬಳಿಕ ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಅವರು, ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ, ಕೆ.ಜೆ. ಜಾರ್ಜ್‌, ಎಂ.ಬಿ.ಪಾಟೀಲ, ಪ್ರಿಯಾಂಕ್‌ ಖರ್ಗೆ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಯಮಕನಮರಡಿ ಶಾಸಕರಾಗಿ ಸತೀಶ್​ ಜಾರಕಿಹೊಳಿ, ಚಿತ್ತಾಪುರ ಶಾಸಕರಾಗಿ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್​ ಶಾಸಕರಾಗಿ ರಾಮಲಿಂಗಾರೆಡ್ಡಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್​, ಬಸವನಬಾಗೇವಾಡಿ ಶಾಸಕರಾಗಿ ಶಿವಾನಂದ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಅಧಿವೇಶನದ ಮೊದಲ ದಿನವೇ ಕೆಲ ಶಾಸಕರು ಗೈರಾಗಿದ್ದಾರೆಂದು ತಿಳಿದುಬಂದಿದೆ. ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಗೈರಾಗಿದ್ದಾರೆ. ಬೆಳಿಗ್ಗೆಯಿಂದ ಪಕ್ಷ-ಪ್ರತಿಪಕ್ಷದ ಶಾಸಕರು ಪ್ರಮಾಣವಚಚನ ಸ್ವೀಕರಿಸಿದ್ದು, ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಹಂಗಾಮಿ ಸ್ಪೀಕರ್​ ಆರ್.ವಿ.ದೇಶಪಾಂಡೆ ಮುಂದೂಡಿದ್ದಾರೆ.

suddiyaana