ಕಾಂಗ್ರೆಸ್ ನ ಪ್ರಣಾಳಿಕೆ ಬಿಡುಗಡೆ – ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ

ಕಾಂಗ್ರೆಸ್ ನ ಪ್ರಣಾಳಿಕೆ ಬಿಡುಗಡೆ – ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಜೆಪಿ ಮೇ 1 ರಂದು ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಇದೀಗ ಕಾಂಗ್ರೆಸ್ ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಡಿಸಿಎಂ ಜಿ.ಪರಮೇಶ್ವರ್ ನೇತೃತ್ವದ ಸಮಿತಿಯಲ್ಲಿ ‘ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಎಂಬ ಹೆಸರಿನಲ್ಲಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಈಗಾಗಲೇ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಮುಂದೆ ಅಧಿಕಾರಕ್ಕೆ ಬಂದಾಗ ಮುಂದಿನ ಐದು ವರ್ಷ ತಮ್ಮ ಪಕ್ಷ ಯಾವೆಲ್ಲಾ ಯೋಜನೆಗಳನ್ನು ಜಾರಿಗೆ ತರಲಿದೆ ಎಂಬುದರ ನೀಲ ನಕ್ಷೆಯನ್ನು ಪ್ರಣಾಳಿಕೆ ರೂಪದಲ್ಲಿ ಬಿಡುಗಡೆ ಮಾಡಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ನಾಯಕ ರಣ್​ದೀಪ್​ ಸುರ್ಜೇವಾಲಾ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ – ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್, ಪ್ರತಿದಿನ ಅರ್ಧ ಲೀ. ಹಾಲು

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ಘೋಷಿಸಿರುವ ಯೋಜನೆಗಳು ಹೀಗಿವೆ..

ಬಿಜೆಪಿ ಜಾರಿಗೆ ತಂದ ಎಲ್ಲಾ ಜನ ವಿರೋಧಿ ಕಾನೂನುಗಳು ಒಂದು ವರ್ಷದಲ್ಲಿ ರದ್ದುಗೊಳಿಸುವುದರ ಜೊತೆಗೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.

ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಹೀಗಾಗಿ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಈಗಾಗಲೇ ಘೋಷಿಸಿರುವ ಗೃಹಶಕ್ತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುವುದು. ಜೊತೆಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ 3000 ಪದವಿಧರರಿಗೆ, 1500 ಡಿಪ್ಲೊಮಾ ಪದವಿಧರರಿಗೆ ನೀಡುತ್ತೇವೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ ಉಚಿತ 10 ಕೆಜಿ ಅಕ್ಕಿ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ 2,000 ಪ್ರತಿ ಮನೆಯ ಯಜಮಾನಿಗೆ ನೀಡಲಾಗುವುದು. ಜೊತೆಗೆ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ ಪ್ರಯಾಣ ಮಾಡಲಾಗುವುದು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ರದ್ದುಗೊಳಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಪಠ್ಯಪುಸ್ತಕ ಮರಳಿ ಪರಿಷ್ಕರಣೆಗೊಳಿಸಲಾಗುವುದು. ಪಿಯುಸಿಯಿಂದ ಪಿಜಿವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್, ಡಿಜಿಟಲ್ ನೋಟ್ ಪ್ಯಾಡ್ ಉಚಿತವಾಗಿ ನೀಡಲಾಗುವುದು. ಎರಡು ವರ್ಷಗಳಿಗೊಮ್ಮೆ ಹಿರಿಯ ನಾಗರಿಕರಿಗೆ ರಾಜ್ಯದ 15, ದೇಶದ 10 ಪ್ರವಾಸಿ ತಾಣಗಳಿಗೆ ಉಚಿತ ಯಾತ್ರಾ ಪ್ರವಾಸ ಮಾಡಲಾಗುವುದು.

ಎಸ್‍ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್‍ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ, ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿ ಒಳ ಮೀಸಲಾತಿ ರದ್ದುಗೊಳಿಸಿ, ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ ಮಾಡಲಾಗುತ್ತದೆ. ಎಸ್‍ಸಿ-ಎಸ್‍ಟಿ ಒಳ ಮೀಸಲಾತಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ಬದ್ಧವಾಗಿದೆ.

suddiyaana