ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಇಡೀ ದೇಶವೇ ತಲೆತಗ್ಗಿಸುವಂತಹ ಕೃತ್ಯ ಮಣಿಪುರದಲ್ಲಿ ನಡೆದಿದೆ. ನೂರಾರು ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ವೀಡಿಯೋ ಮಾಡಿ ಪೈಶಾಚಿಕತೆ ಮೆರೆದಿತ್ತು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಇಡೀ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಘಟನೆ ಮಣಿಪುರದಲ್ಲಿ ಮತ್ತಷ್ಟು ಹಿಂಸಾತ್ಮಕ ಪ್ರತಿಭಟನೆ ಕಾರಣವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರಾದಾಸ್ ಸಿಂಗ್ ಮನೆಯನ್ನು ಬೆಂಕಿ ಹಾಕಿ ಸುಟ್ಟುಹಾಕುವ ಮೂಲಕ ಪ್ರತಿಭಟನಾಕಾರರ ಗುಂಪು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಣಿಪುರದಲ್ಲಿ ನಡೆದ ಪೈಶಾಚಿಕ ಕೃತ್ಯ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ – ತಪ್ಪಿತಸ್ಥರ ಬಂಧನಕ್ಕೆ ಅಮಿತ್ ಶಾ ಸೂಚನೆ

ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಬುಧವಾರ ಸೋಶಿಯಲ್‌‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಕಳೆದ ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿತ್ತು.

ವಿಡೀಯೋ ವೈರಲ್‌ ಆದ ಬಳಿಕ ರೊಚ್ಚಿಗೆದ್ದ ಜನ ಪ್ರತಿಭಟನೆಗೆ ಮುಂದಾಗಿದ್ದರು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಣಿಪುರದ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೇಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ಸಂಜೆ ವೇಳೆಗೆ ನಾಲ್ವರನ್ನ ಬಂಧಿಸಲಾಗಿತ್ತು. ಆದರೂ ಪ್ರತಿಭಟನಾಕಾರರ ಆಕ್ರೋಶ ಮುಂದುವರಿದಿದ್ದು, ಶುಕ್ರವಾರವೂ ಹಿಂಸಾತ್ಮಕ ರೂಪ ತಾಳಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ.

ಶಾಂತಿಭದ್ರತೆಯ ಕಾರಣದಿಂದ ಈ ವೀಡಿಯೋವನ್ನು ಯಾರೂ ಶೇರ್ ಮಾಡದಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಎಲ್ಲಾ ವೀಡಿಯೋಗಳನ್ನು ತೆಗೆದು, ನೆಲದ ಕಾನೂನು ಪಾಲಿಸುವಂತೆ ಟ್ವಿಟ್ಟರ್ ಸಂಸ್ಥೆಗೆ ಸೂಚಿಸಿದೆ.

suddiyaana