ಸಿದ್ದರಾಮಯ್ಯನವರೇ.. ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ! – ಸಿಎಂ ವಿರುದ್ಧ ಆರ್‌ ಅಶೋಕ್ ಕಿಡಿ

ಸಿದ್ದರಾಮಯ್ಯನವರೇ.. ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ! – ಸಿಎಂ ವಿರುದ್ಧ ಆರ್‌ ಅಶೋಕ್ ಕಿಡಿ

ರಾಜ್ಯ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವಿನ ವಾಕ್ಸಮರ ಜೋರಾಗಿದೆ. ಇದೀಗ ವಿಪಕ್ಷ ನಾಯಕ ಆರ್‌ ಅಶೋಕ್‌ ಅನುದಾನ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನ ಟೀಕಿಸಿದ್ದಾರೆ. ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಹೇಳಿದ್ದಾರೆ ಆರ್ ಅಶೋಕ್.

ಇದನ್ನೂ ಓದಿ: ಮೋದಿ ನನ್ನ ಬೆಸ್ಟ್ ಫ್ರೆಂಡ್ – ಮತ್ತೆ ಉಲ್ಟಾ ಹೊಡೆದ ಅಮೆರಿಕ ಅಧ್ಯಕ್ಷ ಟ್ರಂಪ್

ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಆರ್‌ ಅಶೋಕ್‌, ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಏನಿದೆ?

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ‘ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು’ ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಅವರು ‘ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ’ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ ‘ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಅಂತಾರೆ. ಈ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಬರೆದುಕೊಂಡಿದ್ದಾರೆ.

Shwetha M