ಜಲಬಾ*ಬ್ಗೆ ಪಾಕ್ ಬ್ಲಾಸ್ಟ್! ಏನಿದು ಸಿಂಧೂ ಜಲ ಒಪ್ಪಂದ?
ಹನಿ ಹನಿ ನೀರಿಗೂ ಪಾಕ್ ಪರದಾಟ

ಪಾಪಿ ಪಾಕ್ಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ.. ತನ್ನ ನರಿ ಬುದ್ಧಿಯನ್ನ ಭಾರತದ ವಿರುದ್ಧ ತೋರಿಸತ್ತಲೇ ಇರುತ್ತೆ. ಕಾಶ್ಮೀರವನ್ನು ತನ್ನ ತೆಕ್ಕೆಗೆ ಪಡೆಯಲು ಪಾಕಿಸ್ತಾನದ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಲೇ ಇದೆ. 2019ರಲ್ಲಿ ಪುಲ್ವಾಮಾ ದಾಳಿಯ ಮೂಲಕ ಭಾರತೀಯ ಸೈನಿಕರನ್ನು ಹತ್ಯೆಗೈದಿದ್ದ ಉಗ್ರರು ಮಂಗಳವಾರ ಕಾಶ್ಮೀರಕ್ಕೆ ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆಲ್ಲ ಪಾಕಿಸ್ತಾನವೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದೆ ಅನ್ನೋದು ಚಿಕ್ಕ ಮಕ್ಕಳಿಗೂ ಸಹ ಗೊತ್ತಾಗುತ್ತೆ. ಭಾರತ ಈ ಬಾರಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಲು ಮುಂದಾಗಿದೆ. ಹೀಗಾಗಿ, ಪಾಕಿಸ್ತಾನದ ಪಾಲಿಗೆ ಬಹಳ ಅತ್ಯಗತ್ಯವಾದ ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದೆ. ಹಾಗಾದರೆ, ಏನಿದು ಸಿಂಧೂ ಜಲ ಒಪ್ಪಂದ? ಈ ಒಪ್ಪಂದ ಪಾಕಿಸ್ತಾನಕ್ಕೆ ಏಕೆ ಮುಖ್ಯ? ಅನ್ನೋದನ್ನ ತಿಳಿಯೋಣ ಬನ್ನಿ.
ಹೌದು, ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ಒಟ್ಟು ಐದು ಕಠಿಣ ಕ್ರಮಗಳನ್ನು ಭಾರತ ಘೋಷಿಸಿದೆ. ಇದರಲ್ಲಿ ಅತ್ಯಂತ ಪ್ರಮುಖವಾದದ್ದು ಸಿಂಧು ನದಿ ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರ. ಇದು ಅತ್ಯಂತ ಮಹತ್ವದ್ದಾಗಿದ್ದು, ಭಾರತದ ಈ ಕಠಿಣ ನಿರ್ಧಾರ ಪಾಕಿಸ್ತಾನದ ನಿದ್ದೆಗೆಡೆಸಿದೆ. ಗಡಿ ನದಿಗಳ ನೀರಿನ ಬಳಕೆಯ ಬಗ್ಗೆ ಎರಡೂ ಕಡೆಯವರು ಸಹಕರಿಸಲು ಮತ್ತು ಮಾಹಿತಿ ಹಂಚಿಕೊಳ್ಳಲು ಅತ್ಯಂತ ಉಪಯುಕ್ತವಾಗಿದ್ದ ಸಿಂಧು ನದಿ ಒಪ್ಪಂದವನ್ನು ಭಾರತ ಅಮಾನತುಗೊಳಿಸಿರುವುದು, ಪಾಕಿಸ್ತಾನದ ಪಾಲಿಗೆ ಭಾರೀ ಸಂಕಷ್ಟಗಳನ್ನು ತಂದೊಡ್ಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ 1960ರ ಸೆಪ್ಟೆಂಬರ್ 19ರಂದು ಜಾರಿಗೆ ಬಂದಿದ್ದ ಸಿಂಧು ನದಿ ಒಪ್ಪಂದ ಇದೀಗ ರದ್ದಾಗಿದೆ. ಹಾಗಿದ್ದರೆ ಏನಿದು ಸಿಂಧು ನದಿ ಒಪ್ಪಂದ? ಈ ಒಪ್ಪಂದದಲ್ಲಿದ್ದ ಅಂಶಗಳೇನು? ಸಿಂಧು ನದಿ ಒಪ್ಪಂದ ಹೇಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನು ಸಾರುವ ಕೊನೆಯ ಕೊಂಡಿಯಾಗಿ ಉಳಿದುಕೊಂಡಿತ್ತು.
ಏನಿದು ಸಿಂಧೂ ನದಿ ಒಪ್ಪಂದ?
ಸಿಂಧೂ ನದಿ ಮತ್ತು ಅದರ ಉಪನದಿಗಳಲ್ಲಿ ಲಭ್ಯವಿರುವ ನೀರನ್ನು ಬಳಸಲು ಸಿಂಧೂ ಜಲ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ನಡುವಿನ ನೀರಿನ ವಿತರಣಾ ಒಪ್ಪಂದವಾಗಿದೆ. 1960ರಲ್ಲಿ ಕರಾಚಿಯಲ್ಲಿ ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಲ್ಲಿ ಆಗಿನ ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನಿ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಸಿಂಧೂ ನದಿ ನೀರು ಒಪ್ಪಂದಕ್ಕೆ ಸೆಪ್ಟೆಂಬರ್ 19, 1960ರಂದು ಸಹಿ ಹಾಕಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವೆ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಒಪ್ಪಂದದಂತೆ ಪೂರ್ವದಿಂದ ಭಾರತದೊಳಕ್ಕೆ ಹರಿಯುವ ಮೂರು ನದಿಗಳಾದ ಬಿಯಾಸ್, ರಾವಿ ಮತ್ತು ಸಟ್ಲೆಜ್, ಪಾಕಿಸ್ತಾನದೊಳಕ್ಕೆ ಹರಿಯುವ 3 ಪಶ್ಚಿಮದ ನದಿಗಳಾದ ಸಿಂಧು, ಚೆನಾಬ್ ಮತ್ತು ಝೀಲಂ ನದಿಗಳ ಮೇಲೆ ನಿಯಂತ್ರಣವನ್ನು ಸಾಧಿಸುವುದಾಗಿದೆ. ಸಿಂಧೂ ಜಲ ಒಪ್ಪಂದವು ಸಿಂಧು ನದಿಯ ನೀರಿನ ಗರಿಷ್ಠ ಬಳಕೆಯಲ್ಲಿ ಎರಡೂ ದೇಶಗಳ ಹಕ್ಕಿದೆ. ಭಾರತವು ಪಶ್ಚಿಮ ನದಿ ನೀರನ್ನು ಸೀಮಿತ ನೀರಾವರಿ ಬಳಕೆಗೆ, ವಿದ್ಯುತ್ ಉತ್ಪಾದನೆ, ನ್ಯಾವಿಗೇಷನ್, ಮೀನುಗಾರಿಕೆಗೆ ಬಳಸಲು ಅನುಮತಿಸುತ್ತದೆ. ಈ ಒಪ್ಪಂದದ ಪ್ರಕಾರ, ಶಾಶ್ವತ ಸಿಂಧು ಆಯೋಗವನ್ನು ಸ್ಥಾಪಿಸಲಾಗಿದೆ. ಪ್ರತಿ ದೇಶದಿಂದ ಆಯುಕ್ತರನ್ನು ಹೊಂದಿರುವ ಈ ಆಯೋಗವು ಪರಸ್ಪರ ಸಹಕಾರ ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡುತ್ತದೆ. ಸೃಷ್ಟಿಯಾಗುವ ಸಮಸ್ಯೆಗಳನ್ನು ಚರ್ಚಿಸಲು ಎರಡು ದೇಶಗಳು ವಾರ್ಷಿಕವಾಗಿ ಸಭೆ ನಡೆಸುತ್ತವೆ.
ಸಿಂಧೂ ಜಲ ಒಪ್ಪಂದವು ಪಶ್ಚಿಮ ನದಿಗಳಾದ ಸಿಂಧೂ, ಝೀಲಂ, ಚೆನಾಬ್ ಪಾಕಿಸ್ತಾನಕ್ಕೆ ಮತ್ತು ಪೂರ್ವ ನದಿಗಳಾದ ರವಿ, ಬಿಯಾಸ್, ಸಟ್ಲೆಜ್ ಭಾರತಕ್ಕೆ ಹಂಚಿಕೆ ಮಾಡುವ ಮೂಲಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸುಸ್ಥಿರ ನೀರಿನ ವಿಭಜನೆಯನ್ನು ಮಾಡಿತ್ತು. 6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಮತ್ತು ಮಿಲಿಟರಿ ಉದ್ವಿಗ್ನತೆ ಹೆಚ್ಚಾದಾಗಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಶಾಂತಿಯುತ ನೀರು ಹಂಚಿಕೆಗೆ ಅನುಕೂಲವಾಗುವಂತೆ ಸಿಂಧೂ ಜಲ ಒಪ್ಪಂದ ನಿರ್ಣಾಯಕ ಪಾತ್ರ ವಹಿಸಿತ್ತು. ಇದೀಗ ಈ ಒಪ್ಪಂದ ರದ್ದುಗೊಂಡಿದೆ. ಇನ್ನೂ ಮುಖ್ಯವಾದ ವಿಷಯವೆಂದರೆ ಈ ಸಿಂಧೂ ಜಲ ಒಪ್ಪಂದ ಏಷ್ಯಾದ 2 ರಾಷ್ಟ್ರಗಳ ನಡುವಿನ ಏಕೈಕ ಗಡಿಯಾಚೆಗಿನ ನೀರು ಹಂಚಿಕೆ ಒಪ್ಪಂದವಾಗಿದೆ. ಈ ಒಪ್ಪಂದವು ಕೆಳ ಭಾಗದಲ್ಲಿರುವ ದೇಶವಾದ ಪಾಕಿಸ್ತಾನಕ್ಕೆ ಅನುಕೂಲಕರವಾಗಿದೆ. ಇದು ಸಿಂಧೂ ನದಿ ವ್ಯವಸ್ಥೆಯ ಸರಿಸುಮಾರು 80% ನೀರಿನ ಪ್ರವೇಶವನ್ನು ನೀಡುತ್ತದೆ.
2001ರ ಭಾರತೀಯ ಸಂಸತ್ತಿನ ದಾಳಿ ಮತ್ತು 2019ರ ಪುಲ್ವಾಮಾ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ದಾಳಿಗಳು ನಡೆದಾಗಲೂ ಭಾರತ ಸಿಂಧೂ ಜಲ ಒಪ್ಪಂದದಿಂದ ಹಿಂದೆ ಸರಿದಿರಲಿಲ್ಲ. ಆದರೆ, ಈ ಬಾರಿ ಮೋದಿ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ಪಾಕಿಸ್ತಾನದ ವಿರುದ್ಧ ಭಾರತ ಅಸ್ತ್ರವಿಲ್ಲದೇ ಯುದ್ಧ ಮಾಡೋಕೆ ಮೊದಲ ಹೆಜ್ಜೆಯನ್ನ ಇಟ್ಟಿದೆ.