ಪಾಕ್ ಪರ ಘೋಷಣೆ ಆರೋಪ – ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ನ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಸಿರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಇದೀಗ ಈ ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ತಪ್ಪಿತಸ್ಥರನ್ನು ಬಂಧಿಸಬೇಕು ಅನ್ನೋ ಒತ್ತಾಯ ಕೂಡ ಕೇಳಿಬಂದಿದೆ. ಬುಧವಾರ ಸದನದಲ್ಲೂ ಕೂಡ ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ವಿಧಾನಸಭೆ ಕಲಾಪದಲ್ಲಿ ಸದನದ ಬಾವಿಯಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿದೆ. ಈ ಹಿನ್ನಲೆ ಕಲಾಪವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಇದನ್ನೂ ಓದಿ: ಮೋಸದ ಜಾಲಕ್ಕೆ ಸಿಲುಕಿ ರಷ್ಯಾ ಸೇನೆ ಸೇರಿದ್ದ ಹಲವು ಭಾರತೀಯರ ಬಿಡುಗಡೆ
ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದಲ್ಲದೆ ಸ್ಪೀಕರ್ ಪೀಠದ ಎದುರು ಕಾಗದ ಹರಿದು ಎಸೆದಿದ್ದಾರೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನು ಕೂಡಲೇ ಬಂಧಿಸಿ ಎಂದು ಬಿಜೆಪಿ ಒತ್ತಾಯಿಸಿದ್ದಾರೆ. ಈ ಹಿನ್ನಲೆ ವಿಧಾನಸಭೆ ಕಲಾಪವನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಬುಧವಾರದ ಬದಲು ಗುರುವಾರಕ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ.
ಇನ್ನು ಈ ಘಟನೆ ಕುರಿತು ವಿರೋಧ ಪಕ್ಷದ ನಾಯಕ ಆರ್ ಅಶೋಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕಿಡಿಕಾರಿದ್ದಾರೆ. ‘ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಈ ಘಟನೆ ಕಾಂಗ್ರೆಸ್ ಪಕ್ಷದ ವಿಕೃತ, ದೇಶದ್ರೋಹಿ ಮನಸ್ಥಿತಿಯನ್ನು ಪ್ರದರ್ಶನ ಮಾಡಿದೆ. ಚುನಾವಣೆಯಲ್ಲಿ ಗೆದ್ದಿದ್ದರೆ ನಿಮ್ಮ ಅಭ್ಯರ್ಥಿಗಳಿಗೆ ಜೈಕಾರ ಹಾಕಿ, ನಿಮ್ಮ ಪಕ್ಷಕ್ಕೆ ಜೈಕಾರ ಹಾಕಿ, ನಿಮ್ಮ ನಾಯಕರಿಗೆ ಜೈಕಾರ ಹಾಕಿ, ಅದು ಬಿಟ್ಟು ಪಾಕಿಸ್ತಾನ ಜಿಂದಾಬಾದ್ ಎಂದು ನಿಮ್ಮ ಪಕ್ಷದ ಕಾರ್ಯಕರ್ತರು ಘೋಷಣೆ ಕೂಗುತ್ತಾರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಮೂರು ರಾಜ್ಯಸಭೆ ಸ್ಥಾನ ಗೆದ್ದ ಮಾತ್ರಕ್ಕೆ ಮತೊಮ್ಮೆ ದೇಶ ವಿಭಜನೆ ಮಾಡಬಹುದು ಎಂದು ಕೊಂಡಿದ್ದೀರಾ?, ಪಾಕಿಸ್ತಾನ ಜಿಂದಾಬಾದ್ ಎಂಬುದೇ ಕಾಂಗ್ರೆಸ್ ಪಕ್ಷದ ಆತ್ಮಸಾಕ್ಷಿನಾ ಡಿಕೆ ಶಿವಕುಮಾರ್ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.