ಸಿಲಿಕಾನ್‌ ಸಿಟಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ಕಡ್ಡಾಯ – ಪೊಲೀಸ್ ಆಯುಕ್ತ ಬಿ. ದಯಾನಂದ್

ಸಿಲಿಕಾನ್‌ ಸಿಟಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ಕಡ್ಡಾಯ – ಪೊಲೀಸ್ ಆಯುಕ್ತ ಬಿ. ದಯಾನಂದ್

ಬೆಂಗಳೂರು: ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಗಣೇಶ ಹಬ್ಬ ಆಚರಣೆಗೆ ದೇಶದಾದ್ಯಂತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೂ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಬೆಂಗಳೂರಿಗರು ಸಾರ್ವಜನಿಕ ಗಣೇಶೋತ್ಸವ ಆಚರಣೆಗೂ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಬೇಕು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ನಿಮಿತ್ತ ಗುರುವಾರ ಪುರಭವನದಲ್ಲಿ ಶಾಂತಿ ಸೌಹಾರ್ದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, ಈಗಾಗಲೇ ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಣೇಶೋತ್ಸವ ಸಮಿತಿಗಳು, ಸಂಘಟಕರು, ಸಂಘ, ಸಂಸ್ಥೆಗಳ ಮುಖಂಡರೊಂದಿಗೆ ಶಾಂತಿ ಸೌಹಾರ್ದ ಸಭೆಗಳನ್ನು ನಡೆಸಲಾಗಿದೆ. ಗಣೇಶೋತ್ಸವ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಸಂಬಂಧ ಇಲಾಖೆಗಳು ನೀಡುವ ಸಲಹೆ, ಸೂಚನೆಗಳನ್ನು ಪಾಲನೆ ಮಾಡಬೇಕು. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯಾವುದೇ ಅಚಾತುರ್ಯ ನಡೆಯದಂತೆ ನೋಡಿಕೊಳ್ಳಬೇಕು. ನಿಗದಿತ ಮಾರ್ಗಗಳಲ್ಲಿ ಮೆರವಣಿಗೆ, ಸೂಚಿಸಿದ ಸ್ಥಳಗಳಲ್ಲೇ ಗಣೇಶ ವಿಗ್ರಹಗಳ ವಿಸರ್ಜಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಗಣೇಶ ಚತುರ್ಥಿ ಆಚರಣೆಗೆ ಹೊಸ ರೂಲ್ಸ್‌ – ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಹಬ್ಬವನ್ನು ಸುಗಮವಾಗಿ ನಡೆಸಲು ನಗರಸಭೆಯ 63 ಉಪವಿಭಾಗಗಳು ಬಿಬಿಎಂಪಿ, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ಪ್ರತಿನಿಧಿಗಳೊಂದಿಗೆ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕೇಂದ್ರಗಳು ಗಣೇಶ ಮೂರ್ತಿಗಳನ್ನು ಇಡಲು ಪರವಾನಿಗೆ ನೀಡಲು ಅನುಕೂಲ ಮಾಡಿಕೊಡುತ್ತವೆ. ಈ ಕೇಂದ್ರಗಳಲ್ಲಿ ಸಂಘಟಕರು ಅನುಮತಿ ಪತ್ರ ಪಡೆಯಬಹುದು. ಅರ್ಜಿ ಸಲ್ಲಿಸಿದ 48 ಗಂಟೆ ದಾಟಿದರೂ ಅನುಮತಿ ಸಿಗದಿದ್ದಲ್ಲಿ ಅನುಮತಿ ಸಿಕ್ಕಿದೆ ಎಂದು ಭಾವಿಸಬಹುದು. ಹೆಚ್ಚು ಜನಸಂದಿ ಇರುವ ಕಡೆ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಬೇಕು. ಕೋಮು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿಯೂ ಗಣೇಶೋತ್ಸವ ಸಂದರ್ಭದಲ್ಲಿ ಏರಿಯಾಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅವಕಾಶ ನೀಡಲಾಗುವುದಿಲ್ಲ. ಪರಿಸರ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು, ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಜನತೆ ಬಳಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಗಣೇಶ ಮೂರ್ತಿ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಹಾಗೂ ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳನ್ನು ವ್ಯವಸ್ಥೆ ಮಾಡಲಾಗುವುದು. ಕೆರೆ-ಕಲ್ಯಾಣಿಗಳ ಬಳಿ ಪೊಲೀಸ್ ವ್ಯವಸ್ಥೆಯ ಜೊತೆಗೆ ಸಿಸಿಟಿವಿ, ವಿದ್ಯುತ್ ದೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

suddiyaana