ರಾಜಸ್ಥಾನದಿಂದ ರಾಮನಗರಕ್ಕೆ ಪುನೀತ್ ಕೆರೆಹಳ್ಳಿ & ಗ್ಯಾಂಗ್ ಕರೆತರಲು ಪೊಲೀಸರ ಸಿದ್ಧತೆ ಹೇಗಿದೆ..?

ರಾಜಸ್ಥಾನದಿಂದ ರಾಮನಗರಕ್ಕೆ ಪುನೀತ್ ಕೆರೆಹಳ್ಳಿ & ಗ್ಯಾಂಗ್ ಕರೆತರಲು ಪೊಲೀಸರ ಸಿದ್ಧತೆ ಹೇಗಿದೆ..?

ಗೋವು ಸಾಗಾಣಿಕೆ ವೇಳೆ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಬಂಧಿತನಾಗಿರುವ ಪುನೀತ್ ಕೆರೆಹಳ್ಳಿ ಮತ್ತು ಸಹಚರರನ್ನ ರಾಜಸ್ಥಾನದಿಂದ ಕರ್ನಾಟಕಕ್ಕೆ ಕರೆತರಲು ಸಿದ್ಧತೆ ನಡೆಸಲಾಗುತ್ತಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಪೊಲೀಸರು ಕೊಲೆ ಕೇಸ್​ನಲ್ಲಿ ತಲೆಮರೆಸಿಕೊಂಡಿದ್ದ ಐವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ರಾಜಸ್ಥಾನದ ಬನಸ್ವಾರ ಬಳಿ ಆರೋಪಿಗಳನ್ನ ಬಂಧಿಸಿದ್ದು, ಸ್ಥಳೀಯ ನ್ಯಾಯಾಲಯವು ಮೂರು ದಿನಗಳ ಟ್ರಾನ್ಸಿಟ್ ವಾರಂಟ್ ನೀಡಿದೆ. ಹೀಗಾಗಿ ಆರೋಪಿಗಳನ್ನು ಕಾನೂನು ಪ್ರಕಾರ ರಾಮನಗರಕ್ಕೆ ಕರೆತರಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆರೋಪಿಗಳನ್ನು ರಾಜಸ್ಥಾನದಿಂದ ಕರೆತರಲು ಟಿಕೆಟ್‌ ಬುಕ್​ ಮಾಡಲು ಪ್ರಯತ್ನಗಳು ನಡೆದಿವೆ. ಟ್ರಾನ್ಸಿಟ್ ವಾರಂಟ್ ಮೂರು ದಿನಗಳವರೆಗೆ ಇರುವುದರಿಂದ ಎಲ್ಲಾ ಆರೋಪಿಗಳನ್ನು ಗುರುವಾರ ಅಥವಾ ಶುಕ್ರವಾರ ರಾಮನಗರಕ್ಕೆ ಕರೆತರಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಗೋ ಸಾಗಾಟದ ವೇಳೆ ವ್ಯಾಪಾರಿ ಕೊಲೆ ಕೇಸ್ – ರಾಜಸ್ಥಾನದಲ್ಲಿದ್ದ ಪುನೀತ್ ಕೆರೆಹಳ್ಳಿ & ಗ್ಯಾಂಗ್  ಅರೆಸ್ಟ್

ಪುನೀತ್ ಕೆರೆಹಳ್ಳಿ ಹಾಗೂ ನಾಲ್ವರು ಆರೋಪಿಗಳನ್ನು ರಾಮನಗರಕ್ಕೆ ಕರೆತಂದ ನಂತರ ದೂರು ದಾಖಲಾಗಿರುವ ಸಾತನೂರು ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗುವುದು. ಬಳಿಕ ತನಿಖೆಗಾಗಿ ಆರೋಪಿಗಳನ್ನು ನಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ. ಆದ್ರೆ, ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದು, ಜಾಲತಾಣಗಳಲ್ಲಿ ವೀಡಿಯೋ ಹಂಚಿಕೊಂಡಿದ್ದರು. ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್ ಗಿರಿ ಮಾಡಿದ್ದು ಇದ್ರಿಷ್ ಪಾಷಾ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬುಧವಾರ ರಾಜಸ್ಥಾನದಲ್ಲಿ ಬಂಧಿಸಿದ್ದರು. ಆರೋಪಿಗಳಾದ ಪುನೀತ್ ಕೆರೆಹಳ್ಳಿ(ಎ1), ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗರ್, ಸುರೇಶ್ ಕುಮಾರ್​ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಇದೀಗ ಅವರನ್ನು ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲು ಪೊಲೀಸರು ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ.

suddiyaana