ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ  ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ!

ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ  ಪ್ರಧಾನಿಗೆ ಮತ್ತೊಮ್ಮೆ ಪತ್ರ ಬರೆದ ಸಿಎಂ!

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತರೆಮರೆಸಿಕೊಂಡಿದ್ದಾರೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಬಂಧನ ಎಸ್‌ಐಟಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ವಿದೇಶದಲ್ಲಿ ಅಡಗಿ ಕುಳಿತಿರುವ ಪ್ರಜ್ವಲ್‌ ಅನ್ನು ಪತ್ತೆ ಹತ್ತುವುದು ಸವಾಲಾಗಿ ಪರಿಣಮಿಸಿದೆ. ಈ  ಹಿನ್ನೆಲೆಯಲ್ಲಿ ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ಭಗ್ನ – ರೋಚಕ ಪಂದ್ಯ ಗೆದ್ದು ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೆ ಸಿಎಂ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರವನ್ನು ಹೊಣೆ ಮಾಡಿದ ರಾಜ್ಯ ಸರ್ಕಾರ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ ಪ್ರಜ್ವಲ್ ವಾಪಸ್ ಬರಲೇಬೇಕಾಗುತ್ತದೆ. ಹೀಗಾಗಿ ಆ ಕ್ರಮ ಕೈಗೊಳ್ಳಬೇಕು. ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿದೇಶದಿಂದ ಪ್ರಜ್ವಲ್‌ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೂಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವೂ ಕ್ರಮಕೈಗೊಳ್ಳಬೇಕು. ಪ್ರಜಲ್ವ್ ಪಾಸ್‌ಪೋರ್ಟ್‌ ರದ್ದುಪಡಿಸಬೇಕು ಎಂದು ಮೇ ಮೊದಲ ವಾರ ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದರು. ಆದರೆ, ಈ ಪತ್ರಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Shwetha M