ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕ ರೆಡಿ.. ನೋ ಎಂದ ರಾಹುಲ್ – ರಾಯ್ ಬರೇಲಿ, ಅಮೇಥಿ ಕ್ಷೇತ್ರ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್!
ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ದೇಶದಲ್ಲಿ ಈಗಾಗಲೇ 2 ಹಂತದ ಚುನಾವಣೆ ನಡೆದಿದ್ದು, ಮೂರನೇ ಹಂತದ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಮೂರನೇ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಮೇ 3 ರಂದು ಕೊನೆಯ ದಿನವಾಗಿದೆ. ಆದರೆ ಅಮೇಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಇನ್ನೂ ಕೂಡ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿಲ್ಲ. ಗುರುವಾರ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ. ರಾಯ್ ಬರೇಲಿಯಲ್ಲಿ ಪ್ರಿಯಾಂಕ ಗಾಂಧಿ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಪ್ರಿಯಾಂಕ ಸ್ಪರ್ಧಿಸುವುದು ಸಹೋದರ ರಾಹುಲ್ ಗಾಂಧಿಗೆ ಇಷ್ಟವಿಲ್ಲ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಗ್ ಶಾಕ್! – ಜಮೀರ್, ಗೃಹಸಚಿವ ಪರಮೇಶ್ವರ್ ಆಪ್ತರ ಮನೆ ಮೇಲೆ ಐಟಿ ದಾಳಿ
ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿಯಲ್ಲಿ ಹಾಗೂ ಪ್ರಿಯಾಂಕ ಗಾಂಧಿ ರಾಯ್ ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಗಾಂಧಿ-ನೆಹರೂ ಕುಟುಂಬದ ಸಾಂಪ್ರದಾಯಿಕ ಕ್ಷೇತ್ರಗಳು ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಹಲವಾರು ದಶಕಗಳಿಂದ ಅವರ ಮನೆತನದವರು ಇಲ್ಲಿ ಸ್ಪರ್ಧಿಸುತ್ತಾ ಬಂದಿದ್ದಾರೆ. ಪ್ರಿಯಾಂಕಾ ಗಾಂಧಿ ರಾಯ್ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಆದರೆ ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗುತ್ತಿದೆ.
ಗಾಂಧಿ ಕುಟುಂಬದ ಮೂವರೂ ಸಂಸದರಾಗುವುದು ರಾಹುಲ್ ಅವರಿಗೆ ಇಷ್ಟವಿಲ್ಲ ಎಂದು ಮೂಲಗಳು ತಿಳಿಸಿವೆ. ಎರಡೂ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಲು ಬುಧವಾರ ಸಭೆ ನಡೆಸಲಾಯಿತು ಆದರೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ಅವರು ಹೇಳಿದರು. ಗಾಂಧಿ ಕುಟುಂಬದ ಸದಸ್ಯರು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ ಎಂದು ಗಾಂಧಿ ಕುಟುಂಬದ ಆಪ್ತ ಕೆಎಲ್ ಶರ್ಮಾ ಹೇಳಿದ್ದಾರೆ.
ಅಮೇಥಿ ಮತ್ತು ರಾಯ್ ಬರೇಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಿದೆ. ಮುಂದಿನ 24-30 ಗಂಟೆಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರು ಅಂತಿಮಗೊಳಿಸುತ್ತಾರೆ ಮತ್ತು ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.