ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಕ್ಕೆ ವಿರೋಧ – ದೆಹಲಿಯಲ್ಲಿ ಶಿಕ್ಷಕರ ಪ್ರತಿಭಟನೆ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಕರ್ನಾಟಕ ಸೇರಿ ದೇಶದ ವಿವಿಧೆಡೆಯಿಂದ ಸಹಸ್ರಾರು ಶಿಕ್ಷಕರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕದ 2 ಲಕ್ಷ, ದೇಶದ 30 ಲಕ್ಷ ಶಿಕ್ಷಕರು, ಶಿಕ್ಷಕ ವೃತ್ತಿಯಲ್ಲಿ ಮುಂದುವರಿಯಬೇಕಾದರೆ 2 ವರ್ಷದಲ್ಲಿ ಕಡ್ಡಾಯವಾಗಿ ಟಿಇಟಿ ಪಾಸಾಗಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ದೇಶದ 30 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರ ಸೇವೆಯ ಅಭದ್ರತೆಯ ಬಗ್ಗೆ ಪ್ರತಿಭಟನೆಯಲ್ಲಿ ಗಮನ ಸೆಳೆಯಲಾಯಿತು.
ಇದನ್ನೂ ಓದಿ: ಬಾಲಿವುಡ್ನ ದಂತಕತೆ ಧರ್ಮೇಂದ್ರ – ಚಿತ್ರರಂಗದಲ್ಲಿ 6 ದಶಕದ ಸೇವೆ.. ಹಿ ಮ್ಯಾನ್ ಸಿನಿ ಜರ್ನಿ ಹೇಗಿತ್ತು?
ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನವದೆಹಲಿಯ ರಾಷ್ಟ್ರಾಧ್ಯಕ್ಷ ಬಸವರಾಜ ಗುರಿಕಾರ ಹಾಗೂ ಫೆಡರೇಷನ್ ರಾಷ್ಟ್ರೀಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರು ಮಾತನಾಡಿ, ಸುಪ್ರೀಂ ಕೋರ್ಟ್ನ ಆದೇಶದ ಪ್ರಕಾರ ರಾಜ್ಯದಲ್ಲಿ ಟಿಇಟಿಯನ್ನು ಕಡ್ಡಾಯಗೊಳಿಸಿರುವುದರಿಂದ 1 ಲಕ್ಷಕ್ಕೂ ಹೆಚ್ಚು ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಲೋಕಸಭೆ, ರಾಜ್ಯಸಭೆ ಹಾಗೂ ಕೇಂದ್ರ ಸಚಿವ ಸಂಪುಟದಲ್ಲಿ ಇದಕ್ಕೆ ಸೂಕ್ತ ಕಾನೂನು ತಿದ್ದುಪಡಿಯನ್ನು ತಂದು ರಾಷ್ಟ್ರದ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರನ್ನು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಲೋಕಸಭೆಯಲ್ಲಿ ಇದಕ್ಕಾಗಿ ವಿಶೇಷ ಕಾಯ್ದೆ ತಂದು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸೇವಾ ರಕ್ಷಣೆ ನೀಡಿ, ಸುಪ್ರೀಂಕೋರ್ಟ್ನ ಈ ಆದೇಶ ಪೂರ್ವಾನ್ವಯಗೊಳಿಸದೇ ಮುಂದಿನ ನೇಮಕಾತಿಗಳಲ್ಲಿ ಟಿಇಟಿ ಕಡ್ಡಾಯಗೊಳಿಸುವಂತೆ ಒತ್ತಾಯ ಮಾಡಲಾಗುತ್ತಿದೆ. ಟಿಇಟಿಯನ್ನು ರದ್ದುಗೊಳಿಸುವ ಕಾನೂನನ್ನು ಕೇಂದ್ರ ಸರ್ಕಾರ ರಚಿಸದೇ ಹೋದರೆ ಭವಿಷ್ಯದಲ್ಲಿ ಮತ್ತೊಂದು ಸಭೆ ನಡೆಸಿ ರಾಷ್ಟ್ರ ಮಟ್ಟದಲ್ಲಿ ಇನ್ನು ಉಗ್ರ ಹೋರಾಟಕ್ಕೆ ಕರೆ ಕೊಡಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ 25-30 ವರ್ಷ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವವರು ಕೂಡ ಕಡ್ಡಾಯವಾಗಿ ಟಿಇಟಿ ಪಾಸ್ ಮಾಡಬೇಕೆಂಬ ತೀರ್ಪು ಮಾರಕವಾಗಿದೆ. ಟಿಇಟಿ ಎಂಬುದು ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದ್ದು, ಕರ್ನಾಟಕದಲ್ಲಿ 2014ರಲ್ಲಿ ಮೊದಲ ಬಾರಿಗೆ ಜಾರಿಗೆ ಬಂದಿದೆ. ಅದಕ್ಕೂ ಮೊದಲಿನ ಶಿಕ್ಷಕರು ಸಿಇಟಿ ಪರೀಕ್ಷೆಯನ್ನು ಪಾಸಾಗಿ ಶಿಕ್ಷಕರಾಗಿದ್ದಾರೆ. ಈಗ ಅವರು ಕೂಡ ಟಿಇಟಿ ಪರೀಕ್ಷೆ ಪಾಸಾಗಬೇಕಿದೆ. ಹೀಗಾಗಿ ಈ ಹೋರಾಟ ನಡೆಸಲಾಗಿದೆ ಎಂದು ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

ನೋಡಿರಿ

