ಮೋದಿ ರೋಡ್ ಶೋಗಾಗಿ ಪಿಯು ಪರೀಕ್ಷೆ ಮುಂದೂಡಿಕೆ! – ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿ

ಮೋದಿ ರೋಡ್ ಶೋಗಾಗಿ ಪಿಯು ಪರೀಕ್ಷೆ ಮುಂದೂಡಿಕೆ! – ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿ

ಬೆಂಗಳೂರು: ಇವತ್ತು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ರೋಡ್ ಶೋಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್‌ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ‘ಪ್ರಧಾನಮಂತ್ರಿ ನರೇಂದ್ರ ಮೋದಿ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿಕೊಡುವುದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ವಿದ್ಯಾರ್ಥಿಗಳೇನು ಬಿಜೆಪಿಯ ಕಾಲಾಳುಗಳೇ’  ಎಂದು ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ: ರಸ್ತೆ ರಸ್ತೆಗಳಲ್ಲೂ ರಾರಾಜಿಸುತ್ತಿದೆ ‘ಕೇಸರಿ’ – ಬೆಳಗಾವಿಯಲ್ಲಿ ಹೇಗಿದೆ ಮೋದಿ ಚುನಾವಣಾ ರಣತಂತ್ರ..?

‘ನರೇಂದ್ರ ಮೋದಿ ಹೇಳುವುದು ‘ಪರೀಕ್ಷಾ ಪೇ ಚರ್ಚಾ’ ಮಾಡುವುದು ‘ಪರೀಕ್ಷಾ ಮೇ ಆಕ್ರಮಣ್‌’. ಪ್ರಧಾನಮಂತ್ರಿಯ ರೋಡ್‌ ಶೋಗಾಗಿ ಪರೀಕ್ಷೆಗಳನ್ನು ಮುಂದೂಡಿರುವ ರಾಜ್ಯ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಾಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ’ ಎಂದು ಕಿಡಿಕಾರಿದೆ.

‘ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿವಾಗುವುದಾದರೂ ವಿದ್ಯಾರ್ಥಿಗಳ ಭವಿಷ್ಯ ಬಲಿಕೊಟ್ಟು ಶೋಕಿ ನಡೆಸಲು ಹೊರಟಿರುವ ಬಸವರಾಜ ಬೊಮ್ಮಾಯಿ ಅವರೇ, ತಮಗೆ ಚುನಾವಣಾ ಪ್ರಚಾರ ಮುಖ್ಯವೇ? ವಿದ್ಯಾರ್ಥಿಗಳ ಭವಿಷ್ಯ ಮುಖ್ಯವೇ ಸ್ಪಷ್ಟಪಡಿಸಿ. ನರೇಂದ್ರ ಮೋದಿ ಅವರು ನಾ ಪಡುಂಗಾ, ನಾ ಪಡನೆದುಂಗಾ ಎನ್ನಲು ಹೊರಟಿದ್ದಾರೆಯೇ’ ಎಂದು ಕಾಂಗ್ರೆಸ್ ಬಿಜೆಪಿಯನ್ನು ಕುಟುಕಿದೆ.

‘ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್‌ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಅಲ್ಲದೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕಾಲೇಜು ಸಮವಸ್ತ್ರ ಧರಿಸಬಾರದು ಎಂದು ಹೇಳಿದೆ. ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳನ್ನ ಖಾಲಿ ಕುರ್ಚಿ ತುಂಬಿಸಲು ಕರೆಸುವುದಕ್ಕೆ ನಾಚಿಕೆ ಎನಿಸುವುದಿಲ್ಲವೇ ಎಂದು ಕಿಡಿಕಾರಿದೆ.

‘ಯಾವುದೇ ಕಾರಣಕ್ಕೂ ಸಮವಸ್ತ್ರ ಹಾಗೂ ಕಪ್ಪು ಬಟ್ಟೆಧರಿಸಬಾರದು ಎಂದಿರುವುದೇಕೆ? ವಿದ್ಯಾರ್ಥಿಗಳ ಗುರುತು ಸಿಕ್ಕರೆ ಮರ್ಯಾದೆ ಹೋಗುತ್ತದೆ ಎಂಬ ದುರಾಲೋಚನೆಯೇ’ ಎಂದು ಟೀಕಾಪ್ರಹಾರ ನಡೆಸಿದೆ.

suddiyaana