ವರುಣನ ಆರ್ಭಟಕ್ಕೆ ತಮಿಳುನಾಡು ತತ್ತರ! – ಮೂವರು ಸಾವು, ಸಾವಿರಾರು ಮಂದಿ ಸ್ಥಳಾಂತರ!

ವರುಣನ ಆರ್ಭಟಕ್ಕೆ ತಮಿಳುನಾಡು ತತ್ತರ! – ಮೂವರು ಸಾವು, ಸಾವಿರಾರು ಮಂದಿ ಸ್ಥಳಾಂತರ!

ತಮಿಳುನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದೆ. ಮಳೆಯ ರೌದ್ರ ನರ್ತನಕ್ಕೆ ಮೂವರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಭಾನುವಾರದಿಂದ ಭಾರಿ ಮಳೆಯಾಗುತ್ತಿದೆ. ತೂತುಕುಡಿ, ತಿರುನಲ್ವೇಲಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮಳೆಯ ರುದ್ರ ನರ್ತನಕ್ಕೆ ಸೋಮವಾರ ಮೂವರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಾಲ್ಕು ಜಿಲ್ಲೆಗಳಲ್ಲಿ 1,545 ಕುಟುಂಬಗಳ ಸುಮಾರು 7,500 ಜನರನ್ನು 84 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚೀನಾದಲ್ಲಿ ಪ್ರಬಲ ಭೂಕಂಪ – 111 ಜನರ ದುರ್ಮರಣ, 230ಕ್ಕೂ ಹೆಚ್ಚು ಮಂದಿಗೆ ಗಾಯ

ಒಟ್ಟು 425 ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತೂತುಕುಡಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮಂಗಳವಾರ ಕೂಡ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸೋಮವಾರ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಮನವಿಗೆ ಮಣಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಕುರಿತು ತುರ್ತು ಚರ್ಚೆಗಾಗಿ ಅವರನ್ನು ಖುದ್ದಾಗಿ ಭೇಟಿ ಮಾಡಲು ಒಪ್ಪಿಕೊಂಡಿದ್ದಾರೆ.  ಸಂತ್ರಸ್ತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನವದೆಹಲಿಯಿಂದ ಸಿಎಂ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.

ಮಳೆಯಿಂದಾಗಿ ಚೆನ್ನೈಗೆ ಹೋಗುವ ಚೆಂಡೂರ್ ಎಕ್ಸ್‌ಪ್ರೆಸ್‌ನಲ್ಲಿದ್ದ 800 ಕ್ಕೂ ಹೆಚ್ಚು ಪ್ರಯಾಣಿಕರು 24 ಗಂಟೆಗಳ ಕಾಲ ಶ್ರೀವೈಕುಂಟಂ ರೈಲು ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು.  ಸೋಮವಾರ ಬೆಳಗಿನ ಜಾವ 1.30ರ ಸುಮಾರಿಗೆ 300 ಪ್ರಯಾಣಿಕರನ್ನು ಸಮೀಪದ ಶಾಲೆಯೊಂದರ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದರೆ, ಉಳಿದ 500 ಮಂದಿ ಇನ್ನೂ ರೈಲಿನಲ್ಲಿ ಆಹಾರವಿಲ್ಲದೆ ಪರದಾಡುವಂತಾಯಿತು.

ಪ್ರತಿಕೂಲ ಹವಾಮಾನ ಪರಿಸ್ಥಿತಿ ಮತ್ತು ನಿರಂತರ ಮಳೆಯಿಂದಾಗಿ ವಾಯುಪಡೆಯ ಹೆಲಿಕಾಪ್ಟರ್‌ನಿಂದ ಆಹಾರ ಒದಗಿಸುವ ಪ್ರಯತ್ನಗಳು ವಿಫಲವಾಗಿವೆ. ಸ್ಥಳೀಯ ನಿವಾಸಿಗಳು ನಿಲ್ದಾಣದಲ್ಲಿ ಸುಮಾರು 100 ಪ್ರಯಾಣಿಕರಿಗೆ ಆಹಾರವನ್ನು ವಿತರಿಸುವಲ್ಲಿ ಯಶಸ್ವಿಯಾದರು ಎಂದು ಮೂಲಗಳು ತಿಳಿಸಿವೆ.

Shwetha M