ದೆಹಲಿ ಚಲೋ – ಹರಿಯಾಣ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ, ಹಲವರ ಬಂಧನ

ದೆಹಲಿ ಚಲೋ – ಹರಿಯಾಣ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ, ಹಲವರ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುಮಾರು 200 ರೈತ ಸಂಘಟನೆಗಳು ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದೆಹಲಿ ಚಲೋ’ ಹಮ್ಮಿಕೊಂಡಿವೆ. ಈ ರೈತರ ಪ್ರತಿಭಟನೆಯನ್ನು ಚದುರಿಸಲು ಹರಿಯಾಣ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಹಲವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಹರಿಯಾಣ ಶಂಭು ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು. ಈ ವೇಳೆ ಹರಿಯಾಣದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. ಅಷ್ಟೇ ಅಲ್ಲದೇ ಹಲವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಜಪಾನ್‌ನಲ್ಲಿ ಕಾಣಿಸಿಕೊಂಡ ಏವಿಯನ್​ ಫ್ಲೂ – 14 ಸಾವಿರ ಪಕ್ಷಿಗಳನ್ನು ಕೊಂದ ಸರ್ಕಾರ!

ಇನ್ನು ದೆಹಲಿ ಚಲೋ ದಲ್ಲಿ ಭಾಗವಹಿಸಲು ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ಭಾಗಗಳಿಂದ ಭಾರಿ ಸಂಖ್ಯೆಯ ರೈತರು ದೆಹಲಿಯತ್ತ ಧಾವಿಸುತ್ತಿದ್ದಾರೆ.  ರಾಜ್‌ಪುರ ಬೈಪಾಸ್‌ ಮೂಲಕ ಹರಿಯಾಣದ ಅಂಬಾಲಾ ಕಡೆಗೆ ಹೋಗುವುದಕ್ಕೆ ರೈತರಿಗೆ ಅನುಮತಿ ನೀಡಲಾಗಿದೆ. ಆದರೆ, ಅವರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ತಡೆಯಲು ಸಿಂಘು, ಟಿಕ್ರಿ, ಗಾಜೀಪುರ ಗಡಿಯಲ್ಲಿ ಹಲವು ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ರಸ್ತೆಗಳಿಗೆ ಅಡ್ಡಲಾಗಿ ಮುಳ್ಳು ತಂತಿ, ಮೊಳೆಗಳ ಪಟ್ಟಿ, ಸಿಮೆಂಟ್ ಇಟ್ಟಿಗೆ ಮತ್ತು ಕಂಟೈನರ್‌ಗಳನ್ನು ಇಡಲಾಗಿದೆ. ಜತೆಗೆ ಹೆಚ್ಚಿನ ಸಂಖ್ಯೆಯ ಪೊಲೀಸ್ ಮತ್ತು ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಿಂಫು ಗಡಿಯಲ್ಲಿ ವಾಣಿಜ್ಯ ಸೇರಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಹರಿಯಾಣ ಅಧಿಕಾರಿಗಳು ಅಂಬಾಲಾ, ಜಿಂದ್, ಫತೇಹಾಬಾದ್ ಮತ್ತು ಕುರುಕ್ಷೇತ್ರದಲ್ಲಿ ಗಡಿಗಳಲ್ಲಿ ಸಿಮೆಂಟ್ ಇಟ್ಟಿಗೆ, ಕಬ್ಬಿಣದ ಮೊಳೆಗಳ ಪಟ್ಟಿಗಳನ್ನು ಅಡ್ಡಲಾಗಿ ಇರಿಸುವ ಮೂಲಕ ಮೂಲಕ ನಿರ್ಬಂಧಿಸಿದ್ದಾರೆ. ಅಲ್ಲದೆ ರಾಜ್ಯದ 15 ಜಿಲ್ಲೆಗಳಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾದಲ್ಲಿ ಫೆ.13ರವರೆಗೆ ಇಂಟರ್ನೆಟ್ ಮತ್ತು ಎಸ್‌ಎಂಎಸ್‌ ಸೇವೆಯನ್ನು ಸ್ಥಗಿತ ಗೊಳಿಸಲಾಗಿದೆ. ಹರಿಯಾಣದ ಗಡಿ ಗ್ರಾಮಗಳ ರಸ್ತೆಗಳನ್ನೂ ಮುಚ್ಚಲಾಗಿದೆ. ದೆಹಲಿ-ರೋಹಕ್ ಮತ್ತು ದೆಹಲಿ- ಬಹದೂರ್‌ಗಢ ರಸ್ತೆಗಳಲ್ಲಿ ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Shwetha M