ʼತಾ ಕಳ್ಳ ಇತರರ ನಂಬʼ.. ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡುವ ಅಗತ್ಯವಿಲ್ಲ – ಸಿಎಂ ಸಿದ್ಧರಾಮಯ್ಯ

ʼತಾ ಕಳ್ಳ ಇತರರ ನಂಬʼ.. ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡುವ ಅಗತ್ಯವಿಲ್ಲ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವಿಡಿಯೋ ಈಗ ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಚಾರವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನಡುವೆ ವಾಗ್ವಾದ ಮುಂದುವರೆದಿದೆ. ಹೆಚ್‌ಡಿಕೆ ಆರೋಪವನ್ನು ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ ಈಗ ದಾಖಲೆಯನ್ನು ಬಹಿರಂಗಪಡಿಸಿದ್ದು, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ ಮಾತನಾಡಿಲ್ಲ, ಶಾಲೆಗಳ ಅಭಿವೃದ್ಧಿ ಪಟ್ಟಿ ಬಗ್ಗೆ ಮಾತನಾಡಿರುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ ನಲ್ಲಿ ಸಿಎಂ ಸಿದ್ಧರಾಮಯ್ಯ ಅವರು ದಾಖಲೆ ಸಮೇತ ಪೋಸ್ಟ್‌ ಮಾಡಿದ್ದಾರೆ. ʼತಾ ಕಳ್ಳ ಇತರರ ನಂಬʼ ಎಂಬ ಗಾದೆ ಮಾತನ್ನು ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ! – ಕುಮಾರಸ್ವಾಮಿ ಕಿಡಿ

ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ .ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ತಿರುಗೇಟು ನೀಡಿದ್ದಾರೆ.

Shwetha M