ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವ ಕಾರಣ ಏನು? – ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ

ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವ ಕಾರಣ ಏನು? – ಸರ್ಕಾರಕ್ಕೆ ಯತ್ನಾಳ್ ಪ್ರಶ್ನೆ

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವುದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮಂಡ್ಯ ಭಾಗದಲ್ಲಿ ಪ್ರತಿಭಟನೆ ಕೂಡ ನಡೆಯುತ್ತಿವೆ. ಸುಪ್ರೀಂ ಕೋರ್ಟ್‌ ಆದೇಶಕ್ಕೂ ಮುನ್ನ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರಾಜ್ಯ ರಾಜಕೀಯ ನಾಯಕರು ಕೂಡ ಕೆಂಡಾಮಂಡಲವಾಗಿದ್ದಾರೆ. ಇದೀಗ ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಬಗ್ಗೆ ಬುದ್ಧಿ ಜೀವಿಗಳು, ಹೋರಾಟಗಾರರು ಸರ್ಕಾರವನ್ನು ಪ್ರಶ್ನಿಸುವುದಿಲ್ಲವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್‌, ಬುದ್ದಿ ಜೀವಿಗಳು, ಹೋರಾಟಗಾರರು ಯಾರು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರಶ್ನೆ ಮಾಡುವುದಿಲ್ಲವಾ? ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನ ಹೆಚ್ಚುವರಿ ನೀರು ಹರಿಸುವ ಕಾರಣ ಏನು? ಎಂದು ನೇರವಾಗಿಯೇ ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆಯ ಆರ್ಭಟ – ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ ಮಾಡಿದ ಸರ್ಕಾರ

ಅದಲ್ಲದೇ, ಇದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹೊಂದಾಣಿಕೆಯಾ ಎಂದು ಪ್ರಶ್ನಿಸಿರುವ ಅವರು, ಮಂಡ್ಯ ಕಾಂಗ್ರೆಸ್ ಶಾಸಕರೇ ವಿರೋಧ ಮಾಡಿದ್ದರೂ ಈ ಭಂಡತನದ ನಿರ್ಧಾರಕ್ಕೆ ಕಾರಣ ಏನು? ಎಂದು ಸರ್ಕಾರವನ್ನು ಕೇಳಿದ್ದಾರೆ. ಸುಪ್ರೀಂ ಕೋರ್ಟ್‌ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಇನ್ನು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ಕೂಡ ಕಿಡಿಕಾರುತ್ತಿದ್ದಾರೆ. ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಕುಮಾರ್‌ ಗಾಣಿಗ ಅವರು ಈ ವಿಚಾರವಾಗಿ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರದ ಕ್ರಮವನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ರೈತರಿಗೆ ನೀರು ಇಲ್ಲ, ಸಂಕಷ್ಟದ ಪರಿಸ್ಥಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಈ ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು.

suddiyaana